ಮಂಡ್ಯ: ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ಕಾಯ್ದೆಗಳ ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು), ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್), ಪ್ರಾಂತ ಕೃಷಿ ಕೂಲಿಕಾರರ ಸಂಘದ (ಎಐಎಡಬ್ಲ್ಯುಯು) ಸದಸ್ಯರು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಶಿಕ್ಷಣ, ಆರೋಗ್ಯ, ರೈಲ್ವೆ, ರಸ್ತೆ, ವಿದ್ಯುತ್, ದೂರ ಸಂಪರ್ಕ, ವಿಮಾ, ಬ್ಯಾಂಕ್ಗಳ ಖಾಸಗೀಕರಣ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ತಿದ್ದುಪಡಿ ಹಾಗೂ ಅಗತ್ಯ ಸೇವಾ ಸುಗ್ರೀವಾಜ್ಞೆಗಳನ್ನು ರದ್ದುಗೊಳಿಸಿ, ಜನಪರ ಕಾಯ್ದೆಗಳನ್ನು ಹಿಂದಿನಂತೆಯೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ದಿನದಿನಂದ ದಿನಕ್ಕೆ ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಸರ್ಕಾರ ವಿಫಲವಾಗಿದೆ. ದಲಿತರ ಮೇಲಿನ ಹಿಂಸಾಚಾರ, ಮಹಿಳೆಯರ ವಿರುದ್ಧದ ಕೌಟುಂಬಿಕ ಹಾಗೂ ಲೈಂಗಿಕ ದೌರ್ಜನ್ಯಗಳನ್ನು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರವನ್ನು ಮತ್ತು ಆದಿವಾಸಿ ಬುಡಕಟ್ಟು ಜನಗಳ ಶೋಷಣೆ ಮಾಡುತ್ತಿರುವ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಯೊಬ್ಬರನ್ನೂ ಉಚಿತವಾಗಿ ಕೋವಿಡ್ ಪರೀಕ್ಷೆಗೆಗೊಳಪಡಿಸಿ, ಉಚಿತ ಔಷಧ ನೀಡಬೇಕು. ಕುಟುಂಬದ ಪ್ರತಿ ಸದಸ್ಯನಿಗೂ 10 ಕೆ.ಜಿ. ಉಚಿತ ಆಹಾರ ಧಾನ್ಯ ನೀಡಬೇಕು. ಉದ್ಯೋಗ ಖಾತ್ರಿ ವೇತನವನ್ನು ಕನಿಷ್ಠ ₹600 ಕ್ಕೆ ಹೆಚ್ಚಿಸಬೇಕು. ಇದನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ಕನಿಷ್ಠ 200 ದಿನಗಳ ಕೆಲಸವನ್ನು ನೀಡಬೇಕು ಎಂದು ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಬಾಕಿ ಇರುವ 18 ತಿಂಗಳ ಸಂಬಳವನ್ನು ತಕ್ಷಣ ನೀಡಬೇಕು. ಬೀಡಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳ ಸೇರಿದಂತೆ ಇತರೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ನಿರ್ವಹಿಸಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಮುಖಂಡರಾದ ಎಂ.ಪುಟ್ಟಮಾದು, ಡಿ.ಎಲ್.ಮಹಾಲಿಂಗು, ಎಸ್.ಬಿ.ರಾಮು, ಚಂದ್ರಶೇಖರ್, ಎಂ.ರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.