ADVERTISEMENT

ಡಿಕೆಶಿ ಬಂಧನ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 3:53 IST
Last Updated 25 ಸೆಪ್ಟೆಂಬರ್ 2019, 3:53 IST
ಶಾಸಕ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಪಾಂಡವಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಶಾಸಕ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಪಾಂಡವಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಪಾಂಡವಪುರ: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಐದು ದೀಪ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ, ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಿನಿ ವಿಧಾನಸೌಧದವರೆಗೆ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್ ಶಾ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆ. ಐಟಿ, ಇಡಿ, ಸಿಬಿಐ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷಗಳ ಮುಖಂಡರನ್ನು ಧಮನಮಾಡಲು ಹೊರಟಿದ್ದಾರೆ ಎಂದು ಹರಿಹಾಯ್ದರು.

ADVERTISEMENT

ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿದೆ. ಸಾವಿರಾರು ಕೋಟಿ ಹಣ ‌ಲೂಟಿ ಮಾಡಿರುವ ನೀರವ್‌ ಮೋದಿ, ವಿಜಯಮಲ್ಯ, ಅಂಬಾನಿ, ಆದಾನಿಯಂತರವರಿಗೆ ಮೋದಿ ಸರ್ಕಾರ ರಕ್ಷಣೆ ಮಾಡುತ್ತಿದೆ. ಆದರೆ ಯಾವುದೇ ತಪ್ಪನ್ನು ಮಾಡದ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಡೆಯುವ ವಿಧಾನಸಭಾ ಉಪ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಪ್ರಮುಖ ಪಾತ್ರವಹಿಸಿದರೆ ಬಿಜೆಪಿ ಸೋಲು ಖಚಿತ ಎಂಬುದನ್ನು ಅರಿತು ಡಿಕೆಶಿ ಅವರ ಶಕ್ತಿಯನ್ನು ಕುಂದಿಸಲು ಹೊರಟಿದೆ. ಡಿಕೆಶಿ ಅವರು ಬಿಡುಗಡೆಯಾಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಎಚ್‌.ಕೃಷ್ಣೇಗೌಡ, ಕಿಸಾನ್ ಘಟಕದ ಅಧ್ಯಕ್ಷ ಸಿ.ಆರ್.ರಮೇಶ್, ಮಹಿಳಾ ಘಟಕದ ಅಧ್ಯಕ್ಷೆ ಕೋಮಲಮ್ಮ ಚನ್ನಪ್ಪ, ಮುಖಂಡರಾದ ಮರಿದೇವೇಗೌಡ, ಡಾ.ರವೀಂದ್ರ, ಸಿದ್ದರಾಮೇಗೌಡ, ಜಿ.ಇ.ರವಿಕುಮಾರ್, ಆನಂದ್‌, ಚಂದ್ರಶೇಖರ್, ಗುರುಪ್ರಸಾದ್, ಡಿ.ಹುಚ್ಚೇಗೌಡ, ಸಿ.ಎಂ.ದ್ಯಾವಪ್ಪ, ಬಿ.ಕೆ.ರೇವಣ್ಣ. ಬಿ.ಜೆ.ಸ್ವಾಮಿ, ಮಹಮದ್‌ ಹನೀಫ್‌, ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.