ಶ್ರೀರಂಗಪಟ್ಟಣ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿಧಾನ ಪರಿಷತ್ನಲ್ಲಿ ಬೆಂಬಲ ನೀಡುವ ಮೂಲಕ ಜೆಡಿಎಸ್ ಪಕ್ಷ ರೈತರಿಗೆ ದ್ರೋಹ ಬಗೆದಿದೆ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್. ಕೆಂಪೂಗೌಡ ಆಕ್ರೋಶ ವ್ಯಕ್ತಪಡಿಸಿದರು.
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕರ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಬುಧವಾರ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಮಂಗಳವಾರದವರೆಗೂ ಜೆಡಿಎಸ್ ಪಕ್ಷ ಈ ತಿದ್ದುಪಡಿಯನ್ನು ವಿರೋಧಿಸು ತ್ತಿತ್ತು. ವೈಯಕ್ತಿಕ ಲಾಭ ಪಡೆಯಲು ಆ ಪಕ್ಷದ ಮುಖಂಡರು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳಿಗೆ ಬೆಂಬಲ ನೀಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ತಮ್ಮ ನಿಲುವು ಬದಲಿಸಿದ ಆ ಪಕ್ಷದ ಮುಖಂಡರನ್ನು ಜನ ಪ್ರಶ್ನಿಸಬೇಕು ಎಂದು ಹೇಳಿದರು.
ದೆಹಲಿಯಲ್ಲಿ ಪಂಜಾಬ್, ಹರಿಯಾಣ ಇತರ ರಾಜ್ಯಗಳ ರೈತರು ನಡೆಸುತ್ತಿರುವ ಪ್ರತಿಭಟನಾ ಧರಣಿ ನ್ಯಾಯೋಚಿತವಾಗಿದೆ. ಆದರೆ, ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಅನುಸರಿಸುತ್ತಿದೆ. ಉದ್ಯಮಿಗಳ ಪರ ಒಲವು ಹೊಂದಿದ್ದು, ರೈತರಿಗೆ ಅನ್ಯಾಯ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಜನರು ಪಾಠ ಕಲಿಸಲಿದ್ದಾರೆ ಎಂದರು.
ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಳಾಗಾಲ ಕೃಷ್ಣೇಗೌಡ, ಕಾರ್ಯಾಧ್ಯಕ್ಷ ಬಿ.ಎಸ್.ರಮೇಶ್, ಪಿಎಸ್ ಎಸ್ಕೆ ಮಾಜಿ ನಿರ್ದೇಶಕ ಪಾಂಡು, ಜಯರಾಂ, ಎಚ್.ಎಲ್.ಪ್ರಕಾಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.