ಮಂಡ್ಯ: ಬೆಂಗಳೂರು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಣ್ಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಬಂಧಿಸಿರುವ ರೈತರು ಮತ್ತು ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಿಪಿಎಂ, ರೈತ ಸಂಘ ಹಾಗೂ ವಿವಿಧ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಸುಮಾರು 13 ಗ್ರಾಮಗಳ 1770 ಎಕರೆ ಕೃಷಿ ಜಮೀನುಗಳ ಭೂ ಸ್ವಾಧೀನ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಟನ್ ಕಬ್ಬಿಗೆ ₹5,500 ನೀಡಬೇಕು. ಕಬ್ಬು ಅರೆದ 14 ದಿನಗಳೊಳಗೆ ಹಣ ಪಾವತಿಸಬೇಕು. ಕಾವೇರಿ ಆರತಿ ಎಂಬ ಮೌಢ್ಯಾಚರಣೆ ಮತ್ತು ದುಂದುವೆಚ್ಚದ ಕಾರ್ಯಕ್ರಮ ಕೈಬಿಡಬೇಕು. ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು. ದುಡಿಯುವ ಜನತೆಯ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ. ಎಷ್ಟು ದುಡಿದರು ಹೊಟ್ಟೆ ತುಂಬ ಊಟ ಮತ್ತು ನೆಮ್ಮದಿಯ ನಿದ್ದೆ ಮರೀಚಿಕೆಯಾಗಿದೆ. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ದುಡಿಯುವ ವರ್ಗದ ಜನರ ಆದಾಯ ಕುಸಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಕರ್ನಾಟಕ ಜನಶಕ್ತಿಯ ಪೂರ್ಣಿಮಾ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಮುಖಂಡರಾದ ಸಿದ್ದರಾಜು, ಶುಶೀಲಾ, ಬಿ.ಹನುಮೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.