ಶ್ರೀರಂಗಪಟ್ಟಣ: ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿವೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಬುಧವಾರ ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಮಿನಿ ವಿಧಾನಸೌಧದ ಎದುರು ಕೆಲ ಕಾಲ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಕಚೇರಿಗಳಲ್ಲಿ ಸಕಾಲಕ್ಕೆ ಕೆಲಸಗಳು ಆಗದೆ ರೈತರು, ಅಂಗವಿಕಲರು, ವೃದ್ಧರು ಅಲೆದಾಡುವ ಪರಿಸ್ಥಿತಿ ಬಂದಿದೆ ಎಂದು ದೂರಿದರು.
‘ಅಂಗವಿಕಲರು, ವೃದ್ಧರು ಮಾಸಾಶನಕ್ಕೆ ಅರ್ಜಿ ಹಾಕಿದರೆ ನಾನಾ ಕಾರಣ ನೀಡಿ ವಿಳಂಬ ಮಾಡಲಾಗುತ್ತಿದೆ. ಆದಾಯ ಮತ್ತು ಜಾತಿ ಪ್ರಮಾಣ ಪತ್ರದ ನೆಪದಲ್ಲಿ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಜನರ ಕೈಗೆ ಸಿಗುತ್ತಿಲ್ಲ. ಮಾಸಾಶನ ಸಂಬಂಧ ಬರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು’ ಎಂದು ಅಂಗವಿಕಲರ ಸಂಘದ ಅಧ್ಯಕ್ಷ ದರಸಗುಪ್ಪೆ ಮಂಜುನಾಥ್ ಆಗ್ರಹಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜೇಶಗೌಡ ಮಾತನಾಡಿ, ‘ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು. ನಿಯಮಗಳನ್ನು ಸರಳೀಕರಣ ಮಾಡಬೇಕು’ ಎಂದು ಒತ್ತಾಯಿಸಿದರು.
ನಗುವನಹಳ್ಳಿ ಶಿವಸ್ವಾಮಿ ಮಾತನಾಡಿ, ‘ಬಿಪಿಎಲ್ ಪಡಿತರ ಚೀಟಿಗಳು ಅರ್ಹರಿಗೆ ಸಿಗುತ್ತಿಲ್ಲ. ಉಳ್ಳವರು ಪಡೆದುಕೊಳ್ಳುತ್ತಿದ್ದಾರೆ. ಬಡವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.
ಎಚ್.ಡಿ. ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಅಧ್ಯಕ್ಷ ಕೆ.ಎನ್. ಕುಮಾರಸ್ವಾಮಿ, ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಬಿ. ಶಂಕರಬಾಬು, ಕಾರ್ಯದರ್ಶಿ ಜಗದೀಶ್, ಮಂಜುನಾಥ್, ಕೆಂಪೇಗೌಡ ಯುವ ವೇದಿಕೆ ಅಧ್ಯಕ್ಷ ಮಹೇಶ್, ಕೂಡಲಕುಪ್ಪೆ ತಪ್ಪಣ್ಣ, ಶ್ರೀನಿವಾಸ ಅಗ್ರಹಾರ ಶಂಕರೇಗೌಡ, ಪುರುಷೋತ್ತಮ, ಪ್ರಕಾಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.