ADVERTISEMENT

ಗುಣಮಟ್ಟದ ಆಹಾರ, ಚಿಕಿತ್ಸೆ ನೀಡಲು ಸೂಚನೆ

ಕೋವಿಡ್ ಕೇರ್ ಸೆಂಟರ್ ಮತ್ತು ಸಾರ್ವಜನಿಕ ಆಸ್ಪತ್ರೆಗೆ ಸಚಿವ ನಾರಾಯಣಗೌಡ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಮೇ 2021, 3:33 IST
Last Updated 17 ಮೇ 2021, 3:33 IST
ಶೆಟ್ಟಿನಾಯಕನಹಳ್ಳಿಯ ಕಿತ್ತೂರು ರಾಣಿ ವಸತಿ ಶಾಲೆಯ ಕೋವಿಡ್ ಕೇರ್ ಸೆಂಟರ್‌ಗೆ ಸಚಿವ ನಾರಾಯಣಗೌಡ ಭೇಟಿ ನೀಡಿ ಪರಿಶೀಲಿಸಿದರು
ಶೆಟ್ಟಿನಾಯಕನಹಳ್ಳಿಯ ಕಿತ್ತೂರು ರಾಣಿ ವಸತಿ ಶಾಲೆಯ ಕೋವಿಡ್ ಕೇರ್ ಸೆಂಟರ್‌ಗೆ ಸಚಿವ ನಾರಾಯಣಗೌಡ ಭೇಟಿ ನೀಡಿ ಪರಿಶೀಲಿಸಿದರು   

ಕೆ.ಆರ್.ಪೇಟೆ: ‘ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಾಗಿ ಬೇಕಾದ ಆಮ್ಲಜನಕ ಸಿಲಿಂಡರ್‌ಗಳು ಮತ್ತು ರೆಮಿಡಿಸಿವಿರ್ ಲಸಿಕೆಯ ದಾಸ್ತಾನನ್ನು ನಿಗದಿತ ಪ್ರಮಾಣದಲ್ಲಿ ಇಟ್ಟುಕೊಂಡು ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಗುಣಮಟ್ಟದ ಊಟ ಮತ್ತು ತಿಂಡಿಯನ್ನು ಕೊಡಿಸಿ ಗುಣಮುಖರಾಗುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ ನಾರಾಯಣಗೌಡ ಸೂಚಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಕೇಂದ್ರಗಳಿಗೆ ಭಾನುವಾರ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದರು. ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳು, ವೈದ್ಯರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಂ.ಎಸ್.ಜಯಂತ್ ಅವರಿಂದ ಕುಂದುಕೊರತೆಗಳ ಬಗ್ಗೆ, ತಹಶೀಲ್ದಾರ್ ಎಂ.ಶಿವಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಅವರಿಂದ ತಾಲ್ಲೂಕಿನಲ್ಲಿ ಸೀಲ್‌ಡೌನ್ ಆಗಿರುವ ಹಳ್ಳಿಗಳ ಮಾಹಿತಿ, ಜನರ ಆರೋಗ್ಯಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಳಿದರು.

ADVERTISEMENT

‘ಲಾಕ್‌ಡೌನ್ ನಿಯಮ ಉಲ್ಲಂಘನೆಯಾಗದಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸರ್ಕಲ್ ಇನ್‌ಸ್ಪೆಕ್ಟರ್ ಎಂ.ಕೆ. ದೀಪಕ್ ಮಾಹಿತಿ ನೀಡಿದರು. ತಾಲ್ಲೂಕಿನ ಶೆಟ್ಟನಾಯಕನಹಳ್ಳಿಯ ಗ್ರಾಮದಲ್ಲಿರುವ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗೂ ಅವರು ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಆಹಾರ ಪೂರೈಕೆ ಮತ್ತು ಮೂಲ ಸೌಕರ್ಯಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದು, ಗುಣಮಟ್ಟದ ಆಹಾರ ಪೂರೈಕೆ ಮತ್ತು ಉತ್ತಮ ವೈದ್ಯಕೀಯ ಚಿಕಿತ್ಸೆಗೆ ಹೆಚ್ಚು ಗಮನಹರಿಸುವಂತೆ ತಹಶೀಲ್ದಾರ್‌ರಿಗೆ, ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚಿಸಿದರು.

ತಾಲ್ಲೂಕಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಸೋಂಕಿತರ ಸಂಖ್ಯೆ ಮತ್ತು ಸಾವಿನ ಪ್ರಮಾಣವು ಗಣನೀಯವಾಗಿ ಕಡಿಮೆಯಾಗುತ್ತಿದೆ. ತಾಲ್ಲೂಕು ಆಡಳಿತವು ಸೋಂಕಿತರಿಗೆ ಅಗತ್ಯವಾಗಿ ಬೇಕಾದ ಆಮ್ಲಜನಕ ಸಿಲಿಂಡರ್, ರೆಮಿಡಿಸಿವಿರ್ ಲಸಿಕೆಯ ದಾಸ್ತಾನನ್ನು ಇಟ್ಟುಕೊಂಡಿದೆ. ಆದ್ದರಿಂದ ಅಪಪ್ರಚಾರಗಳಿಗೆ ಕಿವಿಗೊಡದೇ ಕೊರೊನಾ ಸೋಂಕಿನ ಲಕ್ಷಣವುಳ್ಳವರು ಗಂಟಲು ದ್ರವ ಪರೀಕ್ಷೆ ಮಾಡಿಸಿ ಸೋಂಕು ಇರುವುದು ದೃಢವಾದರೆ ಕೋವಿಡ್ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಪತ್ರೆಯ ವೈದ್ಯರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.