ಶ್ರೀರಂಗಪಟ್ಟಣ: ‘ಕ್ಷೇತ್ರದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಕೊಡಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನ ಅರಕೆರೆ ಗ್ರಾಮದ ಹೆಬ್ಬಾರೆ ಗುಡಿ ಬಳಿ ₹15 ಲಕ್ಷ ಹಾಗೂ ಕೆಳಗಲಪೇಟೆಯಲ್ಲಿ ₹15 ಲಕ್ಷ ವೆಚ್ಚದ ಕುಡಿಯುವ ನೀರಿನ ಟ್ಯಾಂಕ್ಗಳ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಚಾಲ್ತಿಯಲ್ಲಿದೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿಸುವ ಊರುಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರಿ ಸಂಪರ್ಕ ಕಲ್ಪಿಸಲಾಗುತ್ತಿದೆ. ನೀರು ಸರಬರಾಜಿನಲ್ಲಿ ಸಮಸ್ಯೆ ಇದ್ದರೆ ತಕ್ಷಣ ನನ್ನ ಗಮನಕ್ಕೆ ತರಬೇಕು. ಪಿಡಿಒಗಳು ಈ ಬಗ್ಗೆ ನಿಗಾ ವಹಿಸಬೇಕು. ಜನರಿಂದ ದೂರು ಬರದಂತೆ ಎಚ್ಚರ ವಹಿಸಬೇಕು’ ಎಂದು ಹೇಳಿದರು.
‘ಕ್ಷೇತ್ರದಲ್ಲಿ ಆದ್ಯತೆಯ ಮೇಲೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ರಸ್ತೆ, ಕಾಲುವೆ, ಕಿರು ಸೇತುವೆ, ಶಾಲೆ, ಕಾಲೇಜು, ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ರಸ್ತೆಯಲ್ಲಿ ನೀರು ನಿಂತರೆ ಬೇಗ ಹಾಳಾಗುತ್ತವೆ. ಹಾಗಾಗಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು’ ಎಂದು ಅವರು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ. ಮಂಜುನಾಥ್, ಅಭಿವೃದ್ಧಿ ಅಧಿಕಾರಿ ಮೃತ್ಯುಂಜಯ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಂತೋಷ್, ಅಪೆಕ್ಸ್ ಬ್ಯಾಂಕ್ ಮಾಜಿ ನಿರ್ದೇಶಕ ಶಿವಯ್ಯ, ಗ್ರಾಮೀಣ ಕುಡಿಯುವ ನೀರು ಸಬರಾಜು ಯೋಜನೆ ಎಇಇ ಮಂಜುನಾಥ್, ಜೆಇ ಪ್ರತಾಪ್, ಮುಖಂಡರಾದ ಮರಿಸ್ವಾಮಿ, ಎ.ಆರ್. ಶಶಾಂಕ್, ದಿವಾಕರ್, ಚೇತನ್, ಉಮಾಶಂಕರ್, ಉದಯಕುಮಾರ್. ವಿ.ಇ. ನಾಗರಾಜ್, ಬೋರೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.