
ಶ್ರೀರಂಗಪಟ್ಟಣ: ಪಟ್ಟಣ ಹಾಗೂ ತಾಲ್ಲೂಕಿನ ವಿವಿಧ ಪಡಿತರ ವಿತರಣಾ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ತೊಡಕಾಗುತ್ತಿದ್ದು, ಸಮಸ್ಯೆ ಪರಿಹರಿಸಬೇಕು ಎಂದು ರೈತ ಸಂಘದ ಮುಖಂಡರು ಮಂಗಳವಾರ ಒತ್ತಾಯಿಸಿದರು.
ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಚೇತನಾ ಯಾದವ್ ಅವರನ್ನು ಭೇಟಿ ಮಾಡಿ ದೂರು ನೀಡಿದರು.
‘ಸರ್ವರ್ ಸಮಸ್ಯೆ ಕಾರಣದಿಂದ ಪಡಿತರ ವಿತರಣಾ ಕೇಂದ್ರಗಳ ಮುಂದೆ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ದಿನದ ಕೂಲಿಯನ್ನೇ ನೆಚ್ಚಿ ಬದುಕುವವರಿಗೆ ನಷ್ಟವಾಗುತ್ತಿದೆ. ಸಾಕಷ್ಟು ಜನರ ಬೆರಳಚ್ಚು ಸಕಾಲಕ್ಕೆ ಹೊಂದಾಣಿಕೆ ಆಗದೆ ಸಮಸ್ಯೆ ಹೆಚ್ಚಾಗುತ್ತಿದೆ. ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಕೆ. ಶಂಭುಗೌಡ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಚೇತನಾ ಯಾದವ್, ‘ಸರ್ವರ್ ಸಮಸ್ಯೆ ಪರಿಹಾರ ಸಂಬಂಧ ಬಂದಿರುವ ದೂರುಗಳನ್ನು ಆಧರಿಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.
ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕಡತನಾಳು ಬಾಲಕೃಷ್ಣ, ಫಿಲಿಫ್, ಪುರುಷೋತ್ತಮ, ಜಯಶಂಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.