ADVERTISEMENT

ಅರಕೆರೆ ರಸ್ತೆ ವಿಸ್ತರಣೆ: ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 2:25 IST
Last Updated 3 ಫೆಬ್ರುವರಿ 2021, 2:25 IST
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ತಹಶೀಲ್ದಾರ್‌ ಎಂ.ವಿ. ರೂಪಾ ಅವರಿಗೆ ಮನವಿ ಸಲ್ಲಿಸಿದರು
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ತಹಶೀಲ್ದಾರ್‌ ಎಂ.ವಿ. ರೂಪಾ ಅವರಿಗೆ ಮನವಿ ಸಲ್ಲಿಸಿದರು   

ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ರಸ್ತೆ ವಿಸ್ತರಣೆ ಉದ್ದೇಶಕ್ಕೆ ಮನೆ, ಇತರೆ ಆಸ್ತಿಪಾಸ್ತಿ ಕಳೆದುಕೊಳ್ಳುವ ಪರಿಶಿಷ್ಟ ಜಾತಿಯವರಿಗೆ ಸೂಕ್ತ ಪರಿಹಾರ ನಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

‘ರಸ್ತೆ ವಿಸ್ತರಣೆಯಿಂದ ಪರಿಶಿಷ್ಟ ಸಮುದಾಯದ ಸಾಕಷ್ಟು ಜನ ಮನೆ ಕಳೆದುಕೊಳ್ಳಲಿದ್ದಾರೆ. ಅಧಿಕಾರಿಗಳು ಪರಿಹಾರ ಕೊಡದೆ ಮನೆ, ಅಂಗಡಿ ಒಡೆಯುವ ಕೆಲಸ ಮಾಡುತ್ತಿದ್ದಾರೆ, ಅವರನ್ನು ಬೀದಿಪಾಲು ಮಾಡುತ್ತಿದ್ದಾರೆ. ಜನಪ್ರತಿನಿಧಿಗಳು ಪ್ರತಿಷ್ಠೆಗಾಗಿ ತಿಕ್ಕಾಟ ನಡೆಸುತ್ತಿದ್ದು, ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆಸ್ತಿ ಪಾಸ್ತಿ ಕಳೆದುಕೊಳ್ಳುವವರಿಗೆ ಪರಿಹಾರ ಕೊಡದ ಹೊರತು ಕಾಮಗಾರಿ ಮುಂದುವರೆಸಲು ಅವಕಾಶ ನೀಡುವುದಿಲ್ಲ’ ಎಂದು ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಕುಬೇರಪ್ಪ ಎಚ್ಚರಿಸಿದರು.

ತಾಲ್ಲೂಕಿನ ಹೆಬ್ಬಾಡಿ ಗ್ರಾಮದ ವ್ಯಾಪ್ತಿಯ ಸರ್ಕಾರಿ ಭೂಮಿಯಲ್ಲಿ ಎರಡು ದಶಕಗಳಿಂದ ಬೇಸಾಯ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡಿಲ್ಲ. ದರಖಾಸ್ತು ಸಮಿತಿ ಸಭೆ ನಡೆಸಿ ಅರ್ಹರಿಗೆ ಶೀಘ್ರ ಸಾಗುವಳಿ ಪತ್ರ ನೀಡಬೇಕು. ಜಮೀನುಗಳಿಗೆ ಸಂಪರ್ಕ ರಸ್ತೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಮುಖಂಡರಾದ ಮುಂಡುಗದೊರೆ ಶ್ರೀಕಂಠು, ನಾಗೇಂದ್ರ, ಶಿವಣ್ಣ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.