ಮಳವಳ್ಳಿ: ‘ಪ್ರಸ್ತುತ ದಿನಮಾನಗಳ ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ನೌಕರಿಯಲ್ಲಿನ ಏರಿಳಿತದಿಂದ ಕೆಲವರಲ್ಲಿ ಅಭದ್ರತೆ ಕಾಡುತ್ತಿದೆ. ಸರ್ಕಾರಿ ನೌಕರಿಯಲ್ಲಿ ಭದ್ರತೆ ಇರುವುದರಿಂದ ಸಹಜವಾಗಿ ಬೇಡಿಕೆ ಹೆಚ್ಚಾಗಿದೆ. ವಿವಿಧ ಇಲಾಖೆಗಳ ಕೆಲಸ ನಿರ್ವಹಿಸುತ್ತಿರುವ ಎಲ್ಲ ಸರ್ಕಾರಿ ನೌಕರರು ಒಂದು ಕುಟುಂಬ ಇದ್ದಂತೆ’ ಎಂದು ತಹಶೀಲ್ದಾರ್ ಎಸ್.ವಿ.ಲೋಕೇಶ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕ ಶುಕ್ರವಾರ ಆಯೋಜಿಸಿದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ, ಸೇವಾ ಪುರಸ್ಕಾರ ಮತ್ತು ಕರ್ತವ್ಯದಲ್ಲಿ ಒತ್ತಡ ನಿವಾರಣೆ ಉಪನ್ಯಾಸ ಹಾಗೂ ಹಾಸ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರದ ಕಾರ್ಯಕ್ರಮಗಳು ಹೆಚ್ಚಾಗುತ್ತಿರುವುದರಿಂದ ನೌಕರರಿಗೆ ಕೆಲಸದಲ್ಲಿ ಒತ್ತಡ ಹೆಚ್ಚಾಗುತ್ತಿದೆ. ಸರ್ಕಾರದ ಭಾಗವಾಗಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿರುವ ಸಂತಸ ತರುತ್ತದೆ’ ಎಂದು ಹೇಳಿದರು.
ಕರ್ತವ್ಯದಲ್ಲಿ ಒತ್ತಡ ನಿವಾರಣೆ ಉಪನ್ಯಾಸ ಹಾಗೂ ಹಾಸ್ಯ ಪ್ರಸಂಗವನ್ನು ಕಲಾವಿದ ನಗೆಮಳೆರಾಜ ಸಿ.ಚಂದ್ರಾಜ್ ನಡೆಸಿಕೊಟ್ಟರು.
ಈ ವೇಳೆ ಹಿರಿಯ ಪತ್ರಕರ್ತ ಎ.ಎಸ್.ಪ್ರಭಾಕರ್, ಮಾರೇಹಳ್ಳಿ ಆದರ್ಶ ವಿದ್ಯಾಲಯದ ಎಸ್ಡಿಎಂಸಿ ಅಧ್ಯಕ್ಷ ಟಿ.ಎಂ.ಪ್ರಕಾಶ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಚೇತನ್ ಕುಮಾರ್ ಹಾಗೂ ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗೆ ಸೇವಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಮಲ್ಲಿಕಾರ್ಜುನಯ್ಯ, ಗೌರವಾಧ್ಯಕ್ಷ ಎನ್.ಎಂ.ಪುಟ್ಟಸ್ವಾಮಿ, ರಾಜ್ಯ ಪರಿಷತ್ ಸದಸ್ಯ ಬಿ.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಶಿವಶಂಕರ್, ಪ್ರಮುಖರಾದ ಎಂ.ಕೆ.ಶ್ರೀನಿವಾಸ್, ವಿ.ಎಲ್.ನಾಗರಾಜು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.