
ಮಂಡ್ಯ: ‘ಗ್ರಾಮ ಪಂಚಾಯಿತಿಗಳಲ್ಲಿ ನೌಕರರು ಹಾಗೂ ಸಿಬ್ಬಂದಿ ವರ್ಗದವರು ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಾಗಿದರೆ, ಅವರನ್ನು ಗುರುತಿಸಿ ಪ್ರಶಸ್ತಿ ನೀಡುವ ಕೆಲಸ ಆಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಹಾಗೂ ನೌಕರರಿಗೆ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಅವರು ಮಾತನಾಡಿದರು.
‘ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕೆಲಸ ಮಂದಗತಿಯಲ್ಲಿ ಸಾಗುತ್ತಿದ್ದವು, ಆದರೆ ಈಗ ಪರಿಸ್ಥಿತಿ ಬೇರೆಯಾಗಿ ಬದಲಾಗಿ ತ್ವರಿತವಾಗಿ ಕೆಲಸಗಳು ನಡೆಯುತ್ತಿವೆ. ನಿಮ್ಮ ಶ್ರಮವೇ ಇದಕ್ಕೆ ಕಾರಣ’ ಎಂದು ಶ್ಲಾಘಿಸಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ(ಅಭಿವೃದ್ಧಿ) ಲಕ್ಷ್ಮಿ ಮಾತನಾಡಿ, ‘ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ಲಕ್ಷ್ಯ ವಹಿಸದಂತೆ ಎಚ್ಚರಿಕೆಯಿಂದ ಕೆಲಸ ಮಾಡಿಕೊಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಸೂಚಿಸಿದ್ದರು, ಅದನ್ನು ಅಚ್ಚುಕಟ್ಟಾಗಿ ಕೆಲಸ ಮಾಡಿಕೊಂಡು ಬರುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳನ್ನು ತಿಳಿಸುವೆ’ ಎಂದರು.
ನಾಲ್ಕು ದಿನಗಳಿಂದ ನಡೆದ ಸಂಗೀತ, ನಾಟಕ, ನೃತ್ಯ, ಪೂಜಾ ಕುಣಿತ, ಓಟ, ಉದ್ದ ಜಿಗಿತ, ಗುಂಡು ಎಸೆತ, ಕ್ರಿಕೆಟ್, ವಾಲಿಬಾಲ್, ಕೊಕ್ಕೊ, ಕಬಡ್ಡಿ, ಥ್ರೋಬಾಲ್ ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.