
ಮಂಡ್ಯ: ‘ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ. ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅಭಿಪ್ರಾಯಪಟ್ಟರು.
ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ನಡೆದ ಮಂಡ್ಯ ಜಿಲ್ಲಾ ಮಟ್ಟದ ‘ಏಕತಾ ನಡಿಗೆ’(ಯುನಿಟಿ ಮಾರ್ಚ್) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಯುವ ಜನತೆ ಸನ್ಮಾರ್ಗದಲ್ಲಿ ನಡೆಯದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ. ಇಡೀ ದೇಶದ ಶಕ್ತಿಯಾಗಿರುವ ಯುವ ಜನತೆ ಸಕಾರಾತ್ಮಕ ಚಿಂತನೆಯೊಂದಿಗೆ ಉತ್ತಮ ಹಾದಿಯಲ್ಲಿ ಸಾಗಬೇಕು ಮತ್ತು ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ಸ್ವತಂತ್ರ ಪೂರ್ವದಲ್ಲಿ ದೇಶದ ಏಕತೆಗಾಗಿ ಶ್ರಮಿಸಿದ ಗಣ್ಯರಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಒಬ್ಬರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ದೇಶಾಭಿಮಾನ ಮತ್ತು ದೇಶಭಕ್ತಿ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕ ಎಂದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕ ಓಂಪ್ರಕಾಶ್, ಮಂಡ್ಯ ವಿವಿ ಕುಲಸಚಿವರಾದ ಕೃಷ್ಣಕುಮಾರ್, ಪ್ರೊ.ಯೋಗನರಸಿಂಹಾಚಾರಿ, ಪ್ರಾಧ್ಯಾಪಕಿ ಡಾ.ಪ್ರಮೀಳಾ ಎಂ.ಬಿ. ಇತರರು ಪಾಲ್ಗೊಂಡಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.