
ಮಂಡ್ಯ: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳನ್ನು ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಗಳಲ್ಲಿ ಚರ್ಚಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.
ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ಪಾಂಡವಪುರ, ಮಂಡ್ಯ ಉಪವಿಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕುಂದು ಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿನ ಕುಂದು ಕೊರತೆ ಸಭೆಯಲ್ಲಿ ಚರ್ಚಿಸಲಾದ ಶೇ 80ರಷ್ಟು ವಿಷಯಗಳಲ್ಲಿ ಕಾನೂನಿನ ಪ್ರಕಾರ ಮಾಡಬಹುದಾದ ಕೆಲಸಗಳನ್ನು ಮಾಡಲಾಗಿದೆ ಎಂದು ಹೇಳಿದರು.
ಬಿಂಡಿಗನವಿಲೆಯಿಂದ ಹಿರಿಸಾವೆಗೆ ಹೋಗುವ ದಾರಿಯ ಮದ್ಯದ ಹಳ್ಳಿಗಳಿಗೆ 5 ಹಳ್ಳಿಗಳಿಗೆ ರಸ್ತೆಯಲ್ಲಿ ಬಸ್ ಸಂಪರ್ಕ ಇಲ್ಲದೇ ಸದರಿ ಊರಿನ ವಿದ್ಯಾರ್ಥಿಗಳು ಪರದಾಡುವಂತಾಗಿದೆ. 5 ಹಳ್ಳಿಗಳಿಗೆ ಬಸ್ ಹೋಗಲು ಸಾಧ್ಯವಾಗುದಿಲ್ಲವೆಂದಾದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ‘ಪರ್ಯಾಯ ಬಸ್ ಮಾರ್ಗ’ ಆರಂಭಿಸಿ ಎಂದು ಹೇಳಿದರು.
₹2 ಕೋಟಿಗೆ ಬೇಡಿಕೆ:
ಶ್ರೀರಂಗಪಟ್ಟಣ ಟೌನ್ನಲ್ಲಿ ಬಾಬು ಜಗಜೀವನರಾಂ ಸಮುದಾಯದ ಭವನ ನಿರ್ಮಾಣ ಮಾಡಲು ಈಗಾಗಲೇ ₹5 ಕೋಟಿಯನ್ನು ಮಂಜೂರು ಮಾಡಲಾಗಿದೆ. ಮೊದಲ ಹಂತದಲ್ಲಿ ಬಿಡುಗಡೆಗೊಂಡ ₹3 ಕೋಟಿ ವೆಚ್ಚದಲ್ಲಿ ಕಾಮಗಾರಿ ಮಾಡಲಾಗಿದೆ. ಕಾಮಗಾರಿಯನ್ನು ಪೂರ್ಣಗೊಳಿಸಲು ₹2 ಕೋಟಿ ಅನುದಾನವನ್ನು ಬಿಡುಗಡೆ ಮಾಡುವಂತೆ ಕೆ.ಆರ್.ಐ.ಡಿ.ಎಲ್ ರವರಿಗೆ ಅಂದಾಜು ಪಟ್ಟಿ ಸಲ್ಲಿಸಲಾಗಿದೆ. ಹಣ ಬಿಡುಗಡೆಯಾದ ನಂತರ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ 2023-2024ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಜನರಿಗೆ ವಿವಿಧ ಯೋಜನೆಗಳ ಮೂಲಕ 18,621 ಜನರಿಗೆ ₹161.14 ಕೋಟಿ ಬಿಡುಗಡೆ ಮಾಡಲಾಗಿದೆ ಹಾಗೂ 2024-2025ರಲ್ಲಿ 24,112 ಜನರಿಗೆ ₹228.71 ಕೋಟಿ ಸಾಲ ಮಂಜೂರು ಮಾಡಲಾಗಿದೆ. ಬ್ಯಾಂಕ್ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಸಾರ್ವಜನಿಕರೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಸಾಲ ಸೌಲಭ್ಯವನ್ನು ಪರಿಶಿಷ್ಟರಿಗೆ ತಲುಪಿಸುವಂತೆ ಜಿಲ್ಲಾ ಮಟ್ಟದ ಸಭೆ ಆಯೋಜಿಸಿ ಎಂದು ಹೇಳಿದರು.
ನಂತರ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ ಮಾಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.