ಮಂಡ್ಯ: ಜಿಲ್ಲೆಯ ಕೆಆರ್ಎಸ್ ಜಲಾಶಯದಲ್ಲಿ ‘ಸೀ ಪ್ಲೇನ್’ ಆರಂಭಿಸುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜೊತೆ ದೆಹಲಿಯಲ್ಲಿ ಈಚೆಗೆ ಚರ್ಚೆ ನಡೆಸಿದರು.
ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು ಎರಡು ಪ್ರಮುಖ ಬೇಡಿಕೆಗಳನ್ನೊಳಗೊಂಡಂತೆ ಮನವಿ ಪತ್ರ ಸಲ್ಲಿಸಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ.ಆರ್.ಎಸ್) ಜಲಾಶಯದಲ್ಲಿ ಸೀ ಪ್ಲೇನ್ (ಸಮುದ್ರ ವಿಮಾನ ಸೇವೆ) ಆರಂಭಿಸುವ ಬಗ್ಗೆ ಚರ್ಚೆ ನಡೆಸಿದರು.
ಸಮುದ್ರ ವಿಮಾನ ಸೇವೆ ಕರ್ನಾಟಕಕ್ಕೆ ಬಹಳ ಮುಖ್ಯವಾದದ್ದು. ಪ್ರವಾಸೋದ್ಯಮಕ್ಕೆ ಇದು ಹೆಚ್ಚು ಬಳಕೆ ತುಂಬಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಮೈಸೂರು, ಮಂಡ್ಯ, ಬೈಂದೂರು, ಆಲಮಟ್ಟಿ, ಬೇಲೂರು-ಹಳೆಬೀಡು ಮತ್ತು ವಿಜಯನಗರ (ಹಂಪಿ) ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಸಮುದ್ರ ವಿಮಾನ ಸೇವೆಗಳನ್ನು ಪ್ರಾರಂಭಿಸುವ ಪ್ರಸ್ತಾವ ಸಲ್ಲಿಸಿದ್ದಾರೆ.
ಹಾಸನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ನಿರ್ಮಾಣವನ್ನು ತ್ವರಿತಗತಿಯಲ್ಲಿ ಮುಗಿಸುವ ಬಗ್ಗೆ ವಿಮಾನಯಾನ ಸಚಿವರಲ್ಲಿ ಬೃಹತ್ ಕೈಗಾರಿಕೆ ಸಚಿವರು ಮನವಿ ಮಾಡಿದ್ದಾರೆ. ಹಾಸನ ವಿಮಾನ ನಿಲ್ದಾಣದ ನಿರ್ಮಾಣ ಪೂರ್ಣವಾದರೆ ಪ್ರವಾಸೋದ್ಯಮಕ್ಕೆ ಅನುಕೂಲ ಆಗುವುದರ ಜತೆಗೆ ಕೃಷಿ, ಕೈಗಾರಿಕೆ, ಹೈನುಗಾರಿಕೆ ಸೇರಿದಂತೆ ಅನೇಕ ವಲಯಗಳ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ನಂತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.