ಮಂಡ್ಯ: ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದೇವಾಲಯ ನಿರ್ಮಿಸಿರುವ ಶಾಸಕ ಸಿ.ಎಸ್.ಪುಟ್ಟರಾಜು ಮತ್ತು ಅವರ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ರಾಜ್ಯ ಸರ್ಕಾರದ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.
ಶ್ರೀರಂಗಪಟ್ಟಣ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲುಕೋಟೆ ಬಳಿಯ ಜಕ್ಕನಹಳ್ಳಿ ಸರ್ಕಲ್ನಲ್ಲಿ ಗಣಪತಿ ದೇವಾಲಯವನ್ನು ಅಕ್ರಮವಾಗಿ ನಿರ್ಮಿಸುತ್ತಿರುವ ಆರೋಪವಿತ್ತು. ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಾಸಕರು, ರಾಜಕೀಯ ಪ್ರಭಾವ ಬಳಸಿ ಉದ್ಘಾಟನೆ ನೆರವೇರಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಕೆ.ರವೀಂದ್ರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು.
ದೇಗುಲ ತೆರವು ಮಾಡುವುದು ಸೇರಿದಂತೆ ಶಾಸಕ ಹಾಗೂ ಅವರ ಬೆಂಬಲಿಗರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಅರ್ಜಿದಾರರು ಆಗ್ರಹಿಸಿರುವುದನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಲಾಗಿದೆ ಎಂದು ತಿಳಿದಿದ್ದರೂ ಕಾನೂನು ಕ್ರಮ ತೆಗೆದುಕೊಳ್ಳದ ಪಾಂಡವಪುರದ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಮೇಲುಕೋಟೆ ಇನ್ಸ್ಪೆಕ್ಟರ್ ಹಾಗೂ ಜಕ್ಕನಹಳ್ಳಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕರ್ತವ್ಯಲೋಪದ ಬಗ್ಗೆಯೂ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿದಾರರು ಒತ್ತಾಯಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.