
ಬೆಳಕವಾಡಿ: ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆ ಎರಡು ಬದಿಯ ಚರಂಡಿಯ ಕೊಳಚೆ ನೀರು ರಸ್ತೆ ಮಧ್ಯೆ ಹರಿಯುತ್ತಿದ್ದು ಜನರ ಓಡಾಟಕ್ಕೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗಿದೆ.
ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆ ವಿಸ್ತರಣೆ ನೆಪದಲ್ಲಿ ನನೆಗುದಿಗೆ ಬಿದ್ದಿದ್ದು, ರಸ್ತೆಯು ನೂರಾರು ದೊಡ್ಡ ದೊಡ್ಡ ಗುಂಡಿಗಳಿಂದ ಕೂಡಿದೆ. ಮುಖ್ಯರಸ್ತೆಯ ಎರಡು ಬದಿಯಲ್ಲಿ ಚರಂಡಿ ಹೂಳು ತುಂಬಿಕೊಂಡು ಮುಚ್ಚಿ ಹೋಗಿದೆ, ಹಾಗಾಗಿ ಚರಂಡಿಯ ಕೊಳಚೆ ನೀರು ರಸ್ತೆಯ ಗುಂಡಿಗಳಲ್ಲಿ ನಿಂತು ಕೊಳಚೆ ಪ್ರದೇಶವಾಗಿ ಮಾರ್ಪಾಡಾಗಿದೆ. ದುರ್ವಾಸನೆ ಬೀರುತ್ತಿದ್ದು, ಶಾಲೆ, ಕಾಲೇಜು ವಿದ್ಯಾರ್ಥಗಳು, ವೃದ್ಧರು, ಜನರು ಓಡಾಡಲು, ವಾಹನ ಸವಾರರು ಹಾಗೂ ರಸ್ತೆ ಬದಿಯ ನಿವಾಸಿಗಳು ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಪ್ರತಿದಿನ ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿರುವುದನ್ನು ಕಂಡರೂ ಚುನಾಯಿತ ಪ್ರತಿನಿಧಿಗಳು ಸಮಸ್ಯೆ ಯನ್ನು ಬಗೆಹರಿಸಿಲ್ಲ. ಇನ್ನಾದರೂ ಸಂಬಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ಗುಂಡಿ ಮುಚ್ಚಿಸಿ, ಚರಂಡಿಯ ಹೂಳು ತೆಗೆಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಗ್ರಾಮದ ಪ್ರಶಾಂತ್, ಪ್ರಕಾಶ್, ರವಿ, ನಾಗೇಂದ್ರ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.