ADVERTISEMENT

ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್‌ನಿಂದ ಶಿವರಾಮೇಗೌಡ ಉಚ್ಚಾಟನೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2022, 15:47 IST
Last Updated 31 ಜನವರಿ 2022, 15:47 IST
ಎಲ್.ಆರ್.ಶಿವರಾಮೇಗೌಡ
ಎಲ್.ಆರ್.ಶಿವರಾಮೇಗೌಡ   

ಬೆಂಗಳೂರು: ಪಕ್ಷ ವಿರೋದಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮಾಜಿ ಸಂಸದ ಎಲ್‌.ಆರ್‌. ಶಿವರಾಮೇಗೌಡ ಅವರನ್ನು ಜೆಡಿಎಸ್‌ನಿಂದ ಉಚ್ಛಾಟಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಶಿವರಾಮೇಗೌಡ ಅವರು ಜೆಡಿಎಸ್‌ ವರಿಷ್ಠರು, ಮಂಡ್ಯದ ಮಾಜಿ ಸಂಸದ ಜಿ. ಮಾದೇಗೌಡ, ಜೆಡಿಎಸ್‌ ಶಾಸಕ ಸುರೇಶ್‌ ಗೌಡ ಸೇರಿದಂತೆ ಹಲವರ ಬಗ್ಗೆ ಪಕ್ಷದ ಕಾರ್ಯಕರ್ತೆಯೊಬ್ಬರ ಜತೆ ದೂರವಾಣಿಯಲ್ಲಿ ಕೆಟ್ಟದಾಗಿ ಮಾತನಾಡಿರುವ ಆಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದೇ ಕಾರಣದಿಂದ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ‘ಇಡೀ ರಾಜ್ಯವೇ ಗೌರವಿಸುತ್ತಿದ್ದ ಮಾದೇಗೌಡ ಅವರ ಬಗ್ಗೆ ಶಿವರಾಮೇಗೌಡ ಅವರು ಅಸಭ್ಯವಾಗಿ ಮಾತನಾಡಿರುವುದು ಅಕ್ಷಮ್ಯ. ಇಂಥಹ ನಡವಳಿಕೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅಂಥಹವರು ಪಕ್ಷದಲ್ಲಿರುವುದು ನಮಗೆ ಶೋಭೆ ತರುವುದಿಲ್ಲ. ಆದ್ದರಿಂದ ಅವರನ್ನು ಹೊರ ಹಾಕಲಾಗುತ್ತಿದೆ’ ಎಂದರು.

ADVERTISEMENT

‘ಶಿವರಾಮೇಗೌಡರು ಪಕ್ಷದ ಕಾರ್ಯಕರ್ತೆಯ ಜತೆಗೆ ಮಂಡ್ಯ ರಾಜಕೀಯಕ್ಕೆ ಸಂಬಂಧಿಸಿದ ಅನಗತ್ಯ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ₹ 30 ಕೋಟಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಅಷ್ಟು ಹಣವನ್ನು ಯಾರಿಗೆ ಕೊಟ್ಟಿದ್ದರೋ ಗೊತ್ತಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.