
ಮಂಡ್ಯ: ‘ಜಗತ್ತಿನಲ್ಲಿ ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಇನ್ನೊಂದಿಲ್ಲ ಎಂದು ಶಿವಯೋಗಿ ಸಿದ್ಧರಾಮೇಶ್ವರ ಪ್ರತಿಪಾದಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಸಿದ್ದರಾಮೇಶ್ವರರು ಕಾಯಕ ಮತ್ತು ಜ್ಞಾನ ಯೋಗಿಯಾಗಿ ವಚನಗಳ ಮೂಲಕ ಹಲವಾರು ಕೊಡುಗೆ ಮತ್ತು ಸಂದೇಶಗಳನ್ನು ನೀಡುವ ಮೂಲಕ ಜನಮನದಲ್ಲಿ ಉಳಿದಿದ್ದಾರೆ ಎಂದು ಹೇಳಿದರು.
12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ತಮ್ಮ ವಿಚಾರಧಾರೆಯನ್ನು ನೀಡಿದ್ದಾರೆ. ಅನಕ್ಷರತೆ, ಮೂಢನಂಬಿಕೆ ಇದ್ದಂತಹ ಸಂದರ್ಭದಲ್ಲಿ ಜಾತೀಯತೆ ವಿರುದ್ಧ ಹೋರಾಡಿದವರು ಶಿವಯೋಗಿ ಸಿದ್ದರಾಮೇಶ್ವರರು. ವಿಶೇಷವಾಗಿ ಹೆಣ್ಣು ಮಕ್ಕಳನ್ನು ಗೌರವಿಸಬೇಕು. ನಮ್ಮ ಕೆಲಸದ ಮೂಲಕ ನಾವು ದೇವರನ್ನು ಕಾಣಬೇಕು ಹಾಗೂ ಸಮಾನತೆಯನ್ನು ಕಾಣಬೇಕು ಎಂದು ತಿಳಿಸಿದ್ದಾರೆ ಎಂದರು.
ಮಂಡ್ಯ ನಿವೃತ್ತ ಶಿಕ್ಷಣಾಧಿಕಾರಿ ಮಹಾದೇವಪ್ಪ ಮಾತನಾಡಿ, ‘ವಿಜಯಪುರದಿಂದ 40 ಕಿ.ಮೀ. ದೂರದಲ್ಲಿ ಈಗಲೂ ಕೂಡ ಶಿವಯೋಗಿ ಸಿದ್ಧರಾಮೇಶ್ವರರ ಸಮಾಧಿ ಇದೆ. ಲೋಕ ಕಲ್ಯಾಣಕ್ಕಾಗಿ ಅವರು ಕಟ್ಟಿಸಿದ ಕೆರೆ ಈಗಲೂ ಸುಸ್ಥಿತಿಯಲ್ಲಿದೆ’ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಂದೀಶ್, ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ಸಂದೇಶ್ ಮುಂತಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.