ಮಳವಳ್ಳಿ: ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಜಾತಿ, ವರ್ಗಕ್ಕೆ ಸೀಮಿತರಲ್ಲ, ಅವರ ತತ್ವಾದರ್ಶಗಳು ಎಲ್ಲರಿಗೂ ಮಾದರಿಯಾಗಿವೆ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಪೀಠಾಧಿಪತಿ ನಿಶ್ಚಲಾನಂದನಾಥ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕಿನ ವಿವಿಧ ಸಂಘ-ಸಂಸ್ಥೆಗಳು, ಯುವಕರ ಮಿತ್ರರು, ರಕ್ತದಾನಿಗಳ ಒಕ್ಕೂಟ, ಮಿಮ್ಸ್ ರಕ್ತಕೋಶ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕೆಂಪೇಗೌಡರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ತಾಲ್ಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಾಡಪ್ರಭು ಕೆಂಪೇಗೌಡರ ದೇಶದ ಅತಿ ಎತ್ತರದ ಪ್ರತಿಮೆಯ ನೀಲನಕ್ಷೆಯನ್ನು ಅನಾವರಣಗೊಳಿಸಿ ಅವರು ಮಾನಾಡಿದರು.
ಬೆಂಗಳೂರನ್ನು ನಿರ್ಮಿಸಿ ಎಲ್ಲ ಸಮುದಾಯಗಳ ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಸ್ತುತ ಉತ್ತಮ ಆಡಳಿತ ನೀಡಬಹುದು’ಎಂದರು.
ರಕ್ತದಾನ ಶಿಬಿರದಲ್ಲಿ ಸುಮಾರು 300ಕ್ಕೂ ಹೆಚ್ಚು ಯುನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ರಕ್ತದಾನಿಗಳಿಗೆ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.
ವಿವಿಧ ಪಕ್ಷಗಳ ಮುಖಂಡರು ಹಾಗೂ ಹಲವು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.