ADVERTISEMENT

ಹಂಪನಾ ವಿರುದ್ಧ ವಿಚಾರಣೆ ಮುಕ್ತಾಯ: ಎಸ್ಪಿ ಪತ್ರ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 6:52 IST
Last Updated 24 ಜನವರಿ 2021, 6:52 IST

ಮಂಡ್ಯ: ನಗರದ ಪಶ್ಚಿಮ ಠಾಣೆಯಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ವಿಚಾರಣೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಂ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಹಂಪನಾ ಅವರಿಗೆ ಎಸ್‌ಪಿ ಪತ್ರ ಬರೆದಿದ್ದಾರೆ. ‘ತಾವು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಮುಕ್ತಾಯಗೊಳಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ತಮ್ಮ ವಿರುದ್ಧ ದಾಖಲಾದ ದೂರಿನ ವಿಚಾರ, ತಮ್ಮನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ವಿವರವನ್ನು ಕೆಳ ಹಂತದ ಅಧಿಕಾರಿಗಳು ನನಗೆ ಅಥವಾ ಇಲಾಖೆಯ ಇತರ ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡಿಲ್ಲ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

‘ಹಿರಿಯ ನಾಗರಿಕರಾದ ತಮ್ಮನ್ನು ಕೆಳಹಂತದ ಅಧಿಕಾರಿಗಳು ಅನಗತ್ಯವಾಗಿ ಠಾಣೆಗೆ ಕರೆಸಿ ತೊಂದರೆ ನೀಡಿದ್ದಾರೆ, ಮಾನಸಿಕವಾಗಿ ಘಾಸಿಗೊಳ್ಳುವಂತೆ ಮಾಡಿದ್ದಾರೆ. ವೈಯಕ್ತಿಕವಾಗಿ ಹಾಗೂ ಇಲಾಖೆ ಪರವಾಗಿ ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ. ತಮ್ಮನ್ನು ಠಾಣೆಗೆ ಕರೆಸಿದ ಅಧಿಕಾರಿ ವಿರುದ್ಧ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿ ಅನ್ವಯ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.