ಶ್ರೀರಂಗಪಟ್ಟಣ: ಕೆಆರ್ಎಸ್ ಬಳಿ ನಡೆಯುತ್ತಿದ್ದ ‘ಕಾವೇರಿ ಆರತಿ’ ಕಾಮಗಾರಿ ಸ್ಥಗಿತ
ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆ ಸಮೀಪ, ಬೃಂದಾವನ ಉದ್ಯಾನದ ಬಳಿ ದಸರಾ ವೇಳೆಗೆ ನಡೆಸಲು ಉದ್ದೇಶಿಸಿರುವ ‘ಕಾವೇರಿ ಆರತಿ’ ಕಾರ್ಯಕ್ರಮದ ಪೂರ್ವ ಸಿದ್ಧತಾ ಕಾಮಗಾರಿಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ.
‘ಕಾವೇರಿ ಆರತಿ’ ಮಾಡಲು ವೇದಿಕೆ ನಿರ್ಮಿಸುವ ಸ್ಥಳಕ್ಕೆ ಮಣ್ಣು ತುಂಬಿ ಸಮತಟ್ಟು ಮಾಡುವ ಕೆಲಸ ಮೂರು ದಿನಗಳ ಹಿಂದೆ ಆರಂಭವಾಗಿತ್ತು. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದರು.
ಜೂನ್ 11ರಂದು ಕೆಆರ್ಎಸ್ ಡ್ಯಾಂ ಬಳಿ ರೈತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಕಾವೇರಿ ಆರತಿ ವಿರೋಧಿಸಿ ‘ಪ್ರತಿಭಟನಾ ಸಭೆ’ ಹಮ್ಮಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಮಗಾರಿ ನಿಲ್ಲಿಸಲಾಗಿದೆ ಎನ್ನಲಾಗಿದೆ.
‘ಕಾವೇರಿ ಆರತಿ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಅಧಿಕಾರಿಗಳು ಮತ್ತು ರೈತರ ಸಭೆ ನಡೆಸಲು ಉದ್ದೇಶಿಸಲಾಗಿತ್ತು. ಅದಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಜೂನ್ 6ರಂದು ನಡೆದ ಸಭೆಯಲ್ಲಿ ರೈತರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಹಾಗಾಗಿ ಸಿದ್ಧತಾ ಕಾರ್ಯಗಳನ್ನು ಸದ್ಯಕ್ಕೆ ನಿಲ್ಲಿಸುವಂತೆ ಮೇಲಧಿಕಾರಿಗಳು ಮೌಖಿಕವಾಗಿ ಸೂಚನೆ ನೀಡಿದ್ದಾರೆ’ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಜಯಂತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.