ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ದಸರಾ ಉತ್ಸವವನ್ನು 4 ದಿನಕ್ಕೆ ಬದಲಾಗಿ 3 ದಿನ ನಡೆಸಲಾಗುವುದು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.
ತಾಲ್ಲೂಕಿನ ಕಿರಂಗೂರು ವೃತ್ತದ ಬಳಿಯ ದಸರಾ ಬನ್ನಿಮಂಟಪಕ್ಕೆ ಗುರುವಾರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ಈ ಮೊದಲು ಅ.3ರಿಂದ 6 ರವರೆಗೆ ದಸರಾ ನಡೆಸಲು ನಿರ್ಧರಿಸಲಾಗಿತ್ತು. ಕಾರ್ಯಕ್ರಮ ಆಯೋಜನೆ, ಸಂಪನ್ಮೂಲ ಕ್ರೋಡೀಕರಣ, ಪೂರ್ವ ಸಿದ್ಧತೆ ದೃಷ್ಟಿಯಿಂದ 3 ದಿನಗಳವರೆಗೆ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ. ಅ.3ರಂದು ಮಧ್ಯಾಹ್ನ ಉತ್ಸವಕ್ಕೆ ಚಾಲನೆ ಸಿಗಲಿದೆ. ಚಾಲನೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಸೇರಿ ಐದಾರು ಮಂತ್ರಿಗಳು ಹಾಗೂ ಜಿಲ್ಲೆಯ ಎಲ್ಲ ಶಾಸಕರು ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.
‘ಈ ಬಾರಿಯ ದಸರಾ ಉತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಗಾಯಕರಾದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಗೂ ವಿಜಯ್ ಪ್ರಕಾಶ್ ಅವರು ಸಂಗೀತ ರಸಸಂಜೆ ನಡೆಸಿಕೊಡಲಿದ್ದಾರೆ. ಚಲನಚಿತ್ರ ನಿರ್ದೇಶಕ ನಾಗಶೇಖರ್ ಅವರ ತಂಡದಿಂದ ಹಾಸ್ಯ ಸಂಜೆ ನಡೆಯಲಿದೆ. ಗಾಯಕಿ ಎಂ.ಡಿ. ಪಲ್ಲವಿ ದಂಪತಿಯ ಜುಗಲ್ಬಂಧಿ ನಡೆಯಲಿದೆ. 3ನೇ ದಿನ ಸಿನಿಮಾ ಕಲಾವಿದರಿಂದ ಗ್ಲಾಮರಸ್ ನೈಟ್ ನಡೆಯಲಿದೆ’ ಎಂದರು.
ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಶ್ರೀರಂಗನಾಥಸ್ವಾಮಿ ದೇವಾಲಯ ಮೈದಾನದಲ್ಲಿ 6 ಸಾವಿರಕ್ಕೂ ಹೆಚ್ಚು ಜನರು ಕುಳಿತು ಕಾರ್ಯಕ್ರಮ ವೀಕ್ಷಿಸಬಹುದಾದ ಜಲ ನಿರೋಧಕ ವೇದಿಕೆ ನಿರ್ಮಿಸ ಲಾಗುವುದು. ವೇದಿಕೆಯ ಪಕ್ಕದಲ್ಲಿ ಆಹಾರ ಮೇಳ ಆಯೋಜಿಸಲಾಗಿದೆ. ಗ್ರಾಮೀಣ ಕ್ರೀಡೆಗಳು ಕೂಡ ನಡೆಯಲಿವೆ ಎಂದು ವಿವರಿಸಿದರು.
ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.