
ಪಾಂಡವಪುರ: ರಂಗಭೂಮಿ, ಸಂಗೀತ, ಸಾಹಿತ್ಯ ಕ್ಷೇತ್ರಗಳಂತಹ ವಿವಿಧ ಆಯಾಮಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕಿದೆ ಎಂದು ರಂಗಕರ್ಮಿ ಚ.ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ತೇಜಸ್ವಿ ಬಳಗದ ಆಶ್ರಯದಲ್ಲಿ ಈಚೆಗೆ ನಡೆದ ಬಿಜಿಎಸ್ ಶಾಲಾ ವಿದ್ಯಾರ್ಥಿಗಳ ‘ಮಿನುಗುತಾರೆ’ ನಾಟಕ ಪ್ರದರ್ಶನದಲ್ಲಿ ಮಾತನಾಡಿದರು.
‘ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿಯೂ ಸಾಂಸ್ಕೃತಿಕ ಬದಲಾವಣೆಯಾಗುತ್ತಿದ್ದು, ಅವರು ಸ್ವತಂತ್ರರಾಗಿ ತಮ್ಮ ಅನಿಸಿಕೆ, ಅಭಿಪ್ರಾಯವನ್ನು ವ್ಯಕ್ತಪಡಿಸುವ ವಾತಾವರಣ ನಿರ್ಮಾಣವಾಗುತ್ತಿರುವುದು ಉತ್ತಮ ಬೆಳವಣಿಗೆ’ ಎಂದರು.
‘ಇಂದಿನ ಶಿಕ್ಷಣ ಕೇವಲ ಅಂಕ ಆಧಾರಿತವಾಗಿದೆ. ಇಂದಿನ ಸಮಾಜದಲ್ಲಿ ಅಕ್ಷರಸ್ಥರಾಗಿದ್ದೂ ಅನಕ್ಷರಸ್ಥರಂತೆ ವರ್ತಿಸುತ್ತಿದ್ದಾರೆ. ಮಕ್ಕಳಿಗೆ ಕೇವಲ ಪುಸ್ತಕವಲ್ಲದೇ ಹತ್ತು ಹಲವಾರು ಅವಕಾಶಗಳನ್ನು ಕಲ್ಪಿಸಬೇಕಿದೆ. ನಮ್ಮ ಸಮಾಜಕ್ಕೆ ಸಾಮಾಜಿಕ ಕಳಕಳಿಯುಳ್ಳ ಪ್ರಜೆಗಳನ್ನು ರೂಪಿಸುವ ಕೆಲಸ ಶಿಕ್ಷಣದಿಂದ ಆಗಬೇಕಿದೆ’ ಎಂದು ಹೇಳಿದರು.
ಹಿರಿಯ ಗಾಂಧಿವಾದಿ ಬಿ.ಸುಜಯಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮೇನಾಗರ ಪ್ರಕಾಶ್, ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಆರ್.ಧನ್ಯಕುಮಾರ್, ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಬಿಜಿಎಸ್ ಶಾಲೆಯ ಮುಖ್ಯಶಿಕ್ಷಕ ರಘು, ರಂಗನಿರ್ದೇಶಕ ಹಾಗೂ ಶಿಕ್ಷಕ ಆದಿತ್ಯ ಭಾರದ್ವಾಜ್ ವೈದ್ಯ ಡಾ.ಕೆ.ವೈ. ಶ್ರೀನಿವಾಸ್, ಸಮಾಜ ಸೇವಕ ವಿ.ಎ.ಪಾಟೀಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.