ಮಂಡ್ಯ: ‘ಸಂಸದೆ ಸುಮಲತಾ ಅವರು ಈ ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ. ಈ ಕುರಿತು ಈಗಾಗಲೇ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಾತುಕತೆ ನಡೆಸಿದ್ದಾರೆ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮಂಗಳವಾರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸುಮಲತಾ ಅವರು ಈ ಭಾಗದ ಬಹು ದೊಡ್ಡ ನಾಯಕಿ. ಯಾರಿಗೆ ಬೆಂಬಲ ನೀಡಬೇಕು ಎಂಬುದು ಅವರಿಗೆ ತಿಳಿದಿದೆ. ರಾಜ್ಯಮಟ್ಟದ ಮುಖಂಡರೂ ಈ ಕುರಿತು ಅವರೊಂದಿಗೆ ಮಾತನಾಡಿದ್ದಾರೆ. ಕೆ.ಆರ್.ಪೇಟೆ ಕ್ಷೇತ್ರದ ನಮ್ಮ ಅಭ್ಯರ್ಥಿ ಜನಪ್ರಿಯರಾಗಿದ್ದಾರೆ. ಅವರು ಗೆಲ್ಲುವ ವಿಶ್ವಾಸವಿದೆ. ನಾನೂ ಎರಡು ದಿನ ಪ್ರಚಾರಕ್ಕೆ ಬರುತ್ತೇನೆ’ ಎಂದು ಹೇಳಿದರು.
‘ಹುಣಸೂರು ಹಾಗೂ ವಿಜಯನಗರ ಕ್ಷೇತ್ರಗಳನ್ನು ನನ್ನ ಉಸ್ತುವಾರಿಗೆ ನೀಡಲಾಗಿದೆ. ಎಲ್ಲಾ 15 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಜಯಗಳಿಸುತ್ತಾರೆ. ಕೆ.ಆರ್.ಪೇಟೆಯಲ್ಲಿ ಸೋಮವಾರ ಸಚಿವ ಮಾಧುಸ್ವಾಮಿ ಅವರ ಮೇಲೆ ಚಪ್ಪಲಿ ಎಸೆದಿರುವುದು ಯಾರಿಗೂ ಶೋಭೆ ತರುವುದಿಲ್ಲ. ಮತಯಾಚನೆ ಮಾಡಲು, ಪ್ರಚಾರ ನಡೆಸಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ ಹಲ್ಲೆ, ದೌರ್ಜನ್ಯ ಮಾಡುವುದು ಸರಿಯಲ್ಲ’ ಎಂದರು.
ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರ್ಕಾರ ಮೂರು ವರ್ಷ ಆಡಳಿತ ನಡೆಸಲಿದೆ. ಇಂಟಿಲಿಜೆನ್ಸ್ ಏನೇ ವರದಿ ನೀಡಲಿ, ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.