ಮಂಡ್ಯ: ಜಿಲ್ಲೆಯಲ್ಲಿ ರಾಸಾಯನಿಕ ಮುಕ್ತ ಬೆಲ್ಲ ಉತ್ಪಾದಿಸುವ ನಿಟ್ಟಿನಲ್ಲಿ ರೈತರನ್ನು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ವಿವಿಧ ಇಲಾಖೆಗಳ ಪ್ರಗತಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಮಂಡ್ಯದ ಬೆಲ್ಲಕ್ಕೆ ಎಲ್ಲೆಡೆ ಉತ್ತಮ ಬೇಡಿಕೆ ಇದ್ದು, ಕೇಂದ್ರ ಪುರಸ್ಕøತ ಆತ್ಮನಿರ್ಭರ ಭಾರತ ಯೋಜನೆಯಡಿ ಒಂದು ಜಿಲ್ಲೆ ಒಂದು ಉತ್ಪನ್ನ ಕಾರ್ಯಕ್ರಮದಡಿ ರಾಸಾಯನಿಕ ಮುಕ್ತ ಬೆಲ್ಲ ಉತ್ಪಾದಿಸಲು ಮಂಡ್ಯ ಜಿಲ್ಲೆ ಆಯ್ಕೆ ಆಗಿದೆ. ಹಾಗಾಗಿ, ಇದರ ಲಾಭ ಹೆಚ್ಚಿನ ಸಂಖ್ಯೆಯ ರೈತರಿಗೆ ದೊರೆಯಬೇಕು. ರಾಸಾಯನಿಕ ಬಳಸದೇ ಗುಣಮಟ್ಟದ ಬೆಲ್ಲವನ್ನು ಉತ್ಪಾದನೆ ಮಾಡಿದ್ದೇ ಆದಲ್ಲಿ ರೈತರಿಗೆ ಉತ್ತಮ ಬೆಲೆ ಸಿಗಲಿದೆ ಎಂದು ಹೇಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಚಂದ್ರಶೇಖರ್ ಮಾತನಾಡಿ, ಕಾರ್ಯಕ್ರಮದಡಿ ಆನ್ಲೈನ್ ಮೂಲಕ 26 ಅರ್ಜಿ ಸಲ್ಲಿಕೆಯಾಗಿದ್ದು, ಜಿಲ್ಲಾ ಮಟ್ಟದ ಸಮಿತಿಯಿಂದ 7 ಅರ್ಜಿಗಳನ್ನು ಅನುಮೋದಿಸಲಾಗಿದೆ ಎಂದರು.
ಅಪೌಷ್ಠಿಕ ಮಕ್ಕಳ ಸಂಖ್ಯೆ ಶೂನ್ಯಕ್ಕೆ ತನ್ನಿ: ಮಂಡ್ಯ ಜಿಲ್ಲೆಯಲ್ಲಿ ಆರು ವರ್ಷದೊಳಗಿರುವ 144 ಮಕ್ಕಳು ತೀವ್ರ ಅಪೌಷ್ಠಿಕತೆ ಹಾಗೂ 4,832 ಮಕ್ಕಳು ಸಾಧಾರಣ ಅಪೌಷ್ಠಿಕತೆಯಿಂದ ಬಳಲುತ್ತಿದ್ದು, ಅಪೌಷ್ಠಿಕ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ ಮಾತನಾಡಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ನಿಯಮಿತವಾಗಿ ಮಕ್ಕಳ ತೂಕ ಮಾಡುವುದು ಹಾಗೂ ವೈದ್ಯಾಧಿಕಾರಿಗಳಿಂದ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಪೌಷ್ಠಿಕ ಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳಿಗೆ ಔಷಧಿ ಮತ್ತು ಪೂರಕ ಪೌಷ್ಠಿಕ ಕಿಟ್ಗಳ ಅವಶ್ಯಕತೆಯಿದ್ದು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಾನಿಗಳ ಮೂಲಕ ಪಡೆಯಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಜಿ.ಆರ್.ಜೆ. ದಿವ್ಯಾ ಪ್ರಭು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.