ನಾಗಮಂಗಲ: ಒಂದು ಕಾಲದಲ್ಲಿ ತಾಲ್ಲೂಕಿನ ಜೀವನಾಡಿಯಾಗಿದ್ದ ವೀರವೈಷ್ಣವಿ ನದಿ ಇಂದು ಬತ್ತಿದ್ದು, ಅದರ ಉಗಮಸ್ಥಾನಕ್ಕೆ ಆದಿಚುಂಚನ ಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ತಾಲ್ಲೂಕಿನ ಬೋಗಾದಿ ಪಂಚಾಯಿತಿ ವ್ಯಾಪ್ತಿಯ ಗಿಡುವಿ ಹೊಸಹಳ್ಳಿಯಲ್ಲಿ ವೀರವೈಷ್ಣವಿ ನದಿಯ ಉಗಮ ಸ್ಥಾನವಿದೆ.
ನಾಗಮಂಗಲ ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆ ಕೊರತೆಯಿಂದ ಕೆರೆ– ಕಟ್ಟೆಗಳು ಬತ್ತಿವೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಗೂಡೆ ಹೊಸಹಳ್ಳಿ ಏತ ನೀರಾವರಿ ಯೋಜನೆಯಿಂದ ಬಿಂಡಿಗನವಿಲೆ ಹೋಬಳಿಯ ಕೆರೆಕಟ್ಟೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಲು ಅನುಕೂಲವಾಗಲಿದೆ. ಈ ಯೋಜನೆಗೆ ಶೀಘ್ರವಾಗಿ ಚಾಲನೆ ನೀಡುವ ಅಗತ್ಯವಿದೆ. ಮಾರ್ಕೋನಹಳ್ಳಿ ಜಲಾಶಯದಿಂದ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಯಾವುದೇ ತೊಂದರೆ ಇಲ್ಲದಂತೆ ಅನುಷ್ಠಾನಗೊಳಿಸಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ಶಾಸಕ ಸುರೇಶಗೌಡ ಮಾತನಾಡಿ, ‘ತಾಲ್ಲೂಕಿನಲ್ಲಿ ಹಿಂದೆ ಹರಿಯುತ್ತಿದ್ದ ವೀರವೈಷ್ಣವಿ ನದಿಗೆ ಮರುಜೀವ ನೀಡುವ ಉದ್ದೇಶದಿಂದ ಕೇಂದ್ರ ನೀರಾವರಿ ಸಚಿವರು ಈ ಪ್ರದೇಶಕ್ಕೆ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ’ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಲ್ಲೇನಹಳ್ಳಿ ದಿನೇಶ್, ಕೆಂಪೇಗೌಡ, ಹೇಮಾವತಿ ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.