ADVERTISEMENT

ಮಂಡ್ಯಕ್ಕೆ ವಿಶೇಷ ಅನುದಾನ ನೀಡಿ: ಮುಖ್ಯಮಂತ್ರಿಗೆ ಪತ್ರ ಬರೆದ ತಿಮ್ಮೇಗೌಡ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:04 IST
Last Updated 24 ಫೆಬ್ರುವರಿ 2026, 7:04 IST
ಟಿ.ತಿಮ್ಮೇಗೌಡ
ಟಿ.ತಿಮ್ಮೇಗೌಡ   

ಮಂಡ್ಯ: ಈ ಬಾರಿ 2026–27ರ ಬಜೆಟ್‌ನಲ್ಲಿ ಪ್ರಮುಖವಾಗಿ ಮಂಡ್ಯ ಜಿಲ್ಲೆಗೆ ವಿಶೇಷ ಅನುದಾನ ಕೊಟ್ಟು, ಸಮಸ್ಯೆ ಬಗೆಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡ್ಯ ಅಭಿವೃದ್ಧಿ ಮತ್ತು ಮುನ್ನಡೆ ಸಂಸ್ಥೆ ಸದಸ್ಯ ಟಿ. ತಿಮ್ಮೇಗೌಡ ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಡಾ.ನಂಜುಂಡಪ್ಪ ವರದಿ ಅನುಸಾರ ಜಿಲ್ಲೆಯ ಐದು ತಾಲ್ಲೂಕುಗಳು ಹಿಂದುಳಿದ ಮತ್ತು ಅತಿ ಹಿಂದುಳಿದ ತಾಲ್ಲೂಕುಗಳೆಂದು ಪರಿಗಣಿಸಿದೆ. ಹೀಗಿದ್ದರೂ ಕೈಗಾರಿಕೆ, ಪ್ರವಾಸೋದ್ಯಮ, ಕೃಷಿ ಆಧಾರಿತ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಆರೋಗ್ಯ ಕ್ಷೇತ್ರ, ಕೌಶಲ ಅಭಿವೃದ್ಧಿ ಕ್ಷೇತ್ರಗಳು ಕುಂಠಿತವಾಗಿವೆ. ಇದಲ್ಲದೆ ಮೈಷುಗರ್ ಕಾರ್ಖಾನೆ, ಪಾಂಡವಪುರ ಸಕ್ಕರೆ ಕಾರ್ಖಾನೆ ರೋಗಗ್ರಸ್ಥವಾಗಿವೆ. ಈ ಕ್ಷೇತ್ರಗಳಿಗೆ ಅನುದಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 

ನಾಗಮಂಗಲ, ಕೆ.ಆರ್‌.ಪೇಟೆ, ಮಳವಳ್ಳಿ ಸೇರಿದಂತೆ ಜಿಲ್ಲೆಯ ಬಹುತೇಕ ತಾಲ್ಲೂಕುಗಳು ಬರಪೀಡಿತವಾಗಿವೆ. ಇಲ್ಲಿಯ ಜನರು ವಲಸೆ ಹೋಗುತ್ತಿದ್ದಾರೆ. ಮದ್ದೂರು ಶ್ರೀರಂಗಪಟ್ಟಣ, ಪಾಂಡವಪುರ ತಾಲ್ಲೂಕುಗಳಲ್ಲಿ ಕೈಗಾರಿಕೆಗಳಿಗೆ ಅಗತ್ಯವಾದ ಜಮೀನು ಮತ್ತು ನೀರು ಲಭ್ಯವಿದೆ. ಜೊತೆಗೆ ಹೆದ್ದಾರಿ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಕೈಗಾರಿಕಾ ಕಾರಿಡಾರ್‌ ಅಭಿವೃದ್ಧಿ ಪಡಿಸಬಹುದು. ಮುಖ್ಯವಾಗಿ ಎಳನೀರು ಸಂಸ್ಕರಣೆ, ವಾಹನ ತಯಾರಿಕೆ, ಭತ್ತದ ಗಿರಣಿಗಳು, ರಾಸಾಯನಿಕ ಮತ್ತು ಔಷಧಿ ತಯಾರಿಕೆ ಅಭಿವೃದ್ಧಿಪಡಿಸಲು ಒತ್ತಾಯಿಸಿದ್ದಾರೆ. 

ADVERTISEMENT

ಶಿವನ ಸಮುದ್ರ, ರಂಗನತಿಟ್ಟು ಪಕ್ಷಿಧಾಮ, ಕೆಆರ್‌ಎಸ್‌, ಕೆರೆತೊಣ್ಣೂರು, ಮೇಲುಕೋಟೆ ಕ್ಷೇತ್ರಗಳಲ್ಲಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲು ಪ್ರವಾಸಿ ಮಂದಿರ, ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಬಹುದು. ಮಂಡ್ಯ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹೃದ್ರೋಗ, ಕ್ಯಾನ್ಸರ್‌ ಹಾಗೂ ಇತರೆ ರೋಗಗಳಿಂದ ಬಳಲುತ್ತಿರುವರಿಗೆ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರಗಳಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಹಾಗಾಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಅಗತ್ಯವಿದೆ. ಕ್ಯಾನ್ಸರ್‌ ಚಿಕಿತ್ಸಾ ಘಟಕಕ್ಕೆ ಅನುದಾನ, ತುರ್ತಾಗಿ ಟ್ರಾಮಾ ಕೇರ್‌ ಸೆಂಟರ್‌ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

ಮಂಡ್ಯ ಜಿಲ್ಲೆಯು ಸರ್ಕಾರದ ಅನುದಾನದಿಂದ ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. 2026–27ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಈ ಭಾಗದ ರೈತರು ಹಾಗೂ ಮಧ್ಯಮ ವರ್ಗದ ಜನರಿಗೆ ನೆರವಾಗಬೇಕು ಎಂದು ಸರ್ಕಾರಕ್ಕೆ ಕೃಷಿಕ್‌ ಸರ್ವೋದಯ ಫೌಂಡೇಷನ್‌ ಮತ್ತು ಕೆ.ಎಸ್‌.ಎಫ್‌. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವತಿಯಿಂದ ಮನವಿ ಮಾಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.