ಮಳವಳ್ಳಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರಿ ನೀಡುತ್ತಿರುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು’ ಎಂದು ತಳಗವಾದಿ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಟಿ.ಸಿ.ಚಂದ್ರಶೇಖರ್ ಕರೆ ನೀಡಿದರು.
ತಾಲ್ಲೂಕಿನ ತಳಗವಾದಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಗ್ರಾಮದವರೇ ಆದ ಹನುಮಂತಯ್ಯ ಅವರು ಉಪನ್ಯಾಸಕ ಹುದ್ದೆಯಿಂದ ಪ್ರಾಂಶುಪಾಲರ ಹುದ್ದೆಗೆ ಪದೋನ್ನತಿ ಹೊಂದಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಯೋಜಿಸಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದೆ. ಅವುಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಿ ಅವರ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಉಪನ್ಯಾಸಕರ ಮೇಲಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನಂತರ ಸಿ.ಎಸ್.ಆರ್. ಫಂಡ್ ಮೂಲಕ ಶೈಕ್ಷಣಿಕ ವಲಯಕ್ಕೆ ಡಿಜಿಟಲ್ ಟಚ್ ನೀಡುತ್ತಿರುವ ಕಾರ್ಯ ಶ್ಲಾಘನೀಯ’ ಎಂದರು.
ಎಪಿಎಂಸಿ ಮಾಜಿ ಸದಸ್ಯ ದಿಲೀಪ್ ಕುಮಾರ್ (ವಿಶ್ವ) ಮಾತನಾಡಿ, ‘ನಮ್ಮ ಗ್ರಾಮದವರೇ ಆದ ಹನುಮಂತಯ್ಯ ಅವರು ನಮ್ಮೂರಿನ ಸರ್ಕಾರಿ ಶಾಲೆ, ಕಾಲೇಜು ಪ್ರಗತಿಗೆ ಹಾಗೂ ಆರೋಗ್ಯ ಶಿಬಿರಗಳ ಆಯೋಜನೆಗೆ ಸಾಕಷ್ಟು ಶ್ರಮಿಸಿದ್ದಾರೆ. ಇದೀಗ ಅವರು ಪ್ರಾಂಶುಪಾಲರ ಹುದ್ದೆಗೆ ಪದೋನ್ನತಿ ಹೊಂದಿರುವುದು ಸಂತಸ ತಂದಿದೆ’ ಎಂದು ಹೇಳಿದರು.
ಪ್ರಾಂಶುಪಾಲ ಮಂಜುನಾಥ್, ಪ್ರೌಢಶಾಲಾ ಮುಖ್ಯಶಿಕ್ಷಕರಾದ ಮಹೇಂದ್ರ, ಬಿ.ಟಿ.ರಾಮಲಿಂಗಯ್ಯ, ಉಪನ್ಯಾಸಕರಾದ ಪವಿತ್ರಾ, ನಾಗಶ್ರೀ, ರವಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವರಾಜು, ನಿರ್ದೇಶಕ ಜಯರಾಮು, ಮುಖಂಡರಾದ ನಿಂಗಣ್ಣ, ರಾಮಣ್ಣ, ಜಲ್ಲಿ ಚನ್ನಪ್ಪ, ಚಿಕ್ಕೇಗೌಡ, ರಾಮಣ್ಣ, ಬಸವರಾಜು, ಮರಿಸ್ವಾಮಿ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.