ಮಂಡ್ಯ: ‘ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದ್ದು, ನಿವೃತ್ತಿ ನಂತರವೂ ಮಕ್ಕಳಿಗೆ ಜ್ಞಾನ ಹಂಚುವ ಕಾರ್ಯವನ್ನು ನಿರಂತರವಾಗಿ ಮಾಡಬೇಕು’ ಎಂದು ಶಾಸಕ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.
ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರ ಬಳಗದ ವತಿಯಿಂದ ನಗರದ ಕರ್ನಾಟಕ ಸಂಘದ ಕುವೆಂಪು ಬಯಲು ರಂಗಮಂದಿರದಲ್ಲಿ ನಡೆದ ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಸರ್ಕಾರಿ ಸೇವೆಯಲ್ಲಿ 35 ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವುದು ಸುಲಭದ ಮಾತಲ್ಲ. ಅವರ ಸಾಧನೆ ಹೆಚ್ಚಿದೆ. ಮುಂದೆಯೂ ಮಕ್ಕಳಿಗೆ ಮಾರ್ಗದರ್ಶನ ಮಾಡುವುದನ್ನು ಮುಂದುವರಿಸಬೇಕು. ನಿವೃತ್ತ ಜೀವನವನ್ನು ಉತ್ತಮವಾಗಿ ಕಳೆಯಬೇಕು’ ಎಂದು ಹೇಳಿದರು.
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯ ಪ್ರಕಾಶಗೌಡ ಮಾತನಾಡಿ, ಶಿಕ್ಷಕರು ನಿವೃತ್ತಿಯಾದರೂ ಸಹ ಸುತ್ತಮುತ್ತಲ ಮಕ್ಕಳು ಚೆನ್ನಾಗಿ ವ್ಯಾಸಂಗ ಮಾಡಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.
ನಿವೃತ್ತರಾದ ಶಿಕ್ಷಕರಾದ ಶಿವರಾಮು, ಕೆ.ಬಿ.ಅಶೋಕ್ಕುಮಾರ್, ಜವರೇಗೌಡ, ಜಯಶಂಕರ್, ಚಿಕ್ಕನಾಗೇಗೌಡ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಎಂ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಶಂಭೂಗೌಡ, ಉಪಾಧ್ಯಕ್ಷ ಟಿ. ಕೃಷ್ಣಯ್ಯ, ಜಿ.ಎನ್. ಶಿವರುದ್ರಪ್ಪ, ಮುಖ್ಯ ಶಿಕ್ಷಕರ ಸಂಘದ ಎ.ಎಸ್. ದೇವರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.