ADVERTISEMENT

ನಾಗಮಂಗಲ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಕರುಗಳ ಸಾವು

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 6:06 IST
Last Updated 31 ಜನವರಿ 2026, 6:06 IST
ಅಪಘಾತದಲ್ಲಿ ಸಾವನ್ನಪ್ಪಿರುವ ಕರುಗಳು.
ಅಪಘಾತದಲ್ಲಿ ಸಾವನ್ನಪ್ಪಿರುವ ಕರುಗಳು.   

ನಾಗಮಂಗಲ: ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ 10 ಎಳೆ ಕರುಗಳು ಸಾವನ್ನಪ್ಪಿರುವ ದುರ್ಘಟನೆ ತಾಲ್ಲೂಕಿನ ಹುಳ್ಳೇನಹಳ್ಳಿ ಚಿಕ್ಕಯಗಟಿ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕಾರಿನಲ್ಲಿ ಎರಡು ತಿಂಗಳಿನ 25ಕ್ಕೂ ಹೆಚ್ಚು ಸೀಮೆ ಹಸುವಿನ ಕರುಗಳನ್ನು ಬಾಯಿಗೆ ಬಟ್ಟೆ ತುರುಕಿ ಕೈ ಕಾಲು ಕಟ್ಟಿ ಒಂದರ ಮೇಲೊಂದು ತುಂಬಿಕೊಂಡು ಸಾಗಿಸಲಾಗುತ್ತಿತ್ತು. ನಾಗಮಂಗಲದಿಂದ ಮಂಡ್ಯ ಕಡೆಗೆ ತೆರಳುವ ಮಾರ್ಗ ಮಧ್ಯೆ ಚಿಕ್ಕ ಯಗಟಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ವಾಹನ ಬಿದ್ದ ರಭಸಕ್ಕೆ 10ಕ್ಕೂ ಹೆಚ್ಚು ಕರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಬದುಕುಳಿದ ಕರುಗಳನ್ನು ಸಾಕಲು‌ ಸ್ಥಳೀಯರು ತೆಗೆದುಕೊಂಡು ಹೋಗಿದ್ದಾರೆನ್ನಲಾಗಿದೆ. ಅಪಘಾತವಾಗುತ್ತಿದ್ದಂತೆ ವಾಹನ ಬಿಟ್ಟು  ಚಾಲಕ ಪಾರಾರಿಯಾಗಿದ್ದಾನೆ.

ADVERTISEMENT

ಗ್ರಾಮಾಂತರ ಪೋಲೀಸ್ ಠಾಣೆಯ ಪಿಎಸ್‌ಐ ರಾಜೇಂದ್ರ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಕರುಗಳನ್ನು ಗೂಡ್ಸ್ ವಾಹನದಲ್ಲಿ ನಾಗಮಂಗಲ ಪಟ್ಟಣಕ್ಕೆ ಸಾಗಿಸಲಾಯಿತು. ಮರಕ್ಕೆ ಅಂಟಿಕೊಂಡಿದ್ದ ಸ್ಕಾರ್ಪಿಯೋ ಕಾರನ್ನು ಟೋಯಿಂಗ್ ವಾಹನದ ಮೂಲಕ ಠಾಣೆಗೆ ಸಾಗಿಸಲಾಯಿತು.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುವುದಾಗಿ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.