ಪಾಂಡವಪುರ: ಪಟ್ಟಣದ ಉಪ ವಿಭಾಗೀಯ ಆಸ್ಪತ್ರೆ ಆವರಣದಲ್ಲಿದ್ದ 20ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆ ಆವರಣದಲ್ಲಿ ಹೊಂಗೆ, ಬೀಟೆ ಸೇರಿದಂತೆ 50ಕ್ಕೂ ಹೆಚ್ಚು ಮರಗಳಿದ್ದು, ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ನೆರಳು ಹಾಗೂ ಉತ್ತಮ ಗಾಳಿಯನ್ನು ನೀಡುತ್ತಿದ್ದವು. ಆದರೆ, ರಸ್ತೆ ನಿರ್ಮಾಣ ಕಾಮಗಾರಿಗಾಗಿ ಮರಗಳನ್ನು ಹನನ ಮಾಡಲಾಗಿದೆ.
ಶಾಸಕ ಸಿ.ಎಸ್.ಪುಟ್ಟರಾಜು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಉಳಿದ ಮರಗಳನ್ನು ಕತ್ತರಿಸದೆಯೇ ಕಾಮಗಾರಿ ನಡೆಸಬೇಕು ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಕುಮಾರ್ ಅವರಿಗೆ ಸೂಚಿಸಿದರು.
ಕಳೆದ 6–7 ವರ್ಷಗಳ ಹಿಂದೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಎಚ್.ಪಿ.ಸೋಮಶೇಖರ್ ಹಾರೋಹಳ್ಳಿ ನೇತೃತ್ವದಲ್ಲಿ 60ಕ್ಕೂ ಹೆಚ್ಚು ವಿವಿಧ ಬಗೆಯ ಸಸಿಗಳನ್ನು ನೆಟ್ಟಿದ್ದರು. ಆ ಸಸಿಗಳಿಗೆ ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್, ಲೋಹಿಯಾ, ಕುವೆಂಪು ಸೇರಿದಂತೆ ಸಾಹಿತಿ, ಚಿಂತಕರ ಹೆಸರನ್ನು ಇಟ್ಟು ಎರಡು ವರ್ಷಗಳು ನೀರೆರೆದು ಪೋಷಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.