ಶ್ರೀರಂಗಪಟ್ಟಣ: ‘ಟಿಪ್ಪು ಸುಲ್ತಾನ್ ಕೆಆರ್ಎಸ್ ಅಣೆಕಟ್ಟೆ ಕಟ್ಟಲು ಅಡಿಗಲ್ಲು ಹಾಕಿದ್ದ ಎಂಬುದಕ್ಕೆ ಸ್ಪಷ್ಟ ಪುರಾವೆಗಳಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಈ ಕಟ್ಟೆ ಕಟ್ಟಿಸುವಾಗ ಆತ ಇರಲೇ ಇಲ್ಲ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ಪಟ್ಟಣದಲ್ಲಿ ಎನ್. ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ಗೌರಿ ಹಬ್ಬದ ನಿಮಿತ್ತ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಬಾಗಿನ ನೀಡಿ ಅವರು ಮತನಾಡಿದರು.
‘ಮೈಸೂರು ಅರಸರಿಗಿಂತ ಸಿದ್ದರಾಮಯ್ಯ ಹೆಚ್ಚು ಕೆಲಸ ಮಾಡಿದ್ದಾರೆ ಎಂದು ಅವರ ಮಗ ಯತೀಂದ್ರ ಹೇಳಿದ್ದಾರೆ. ಅವರ ಮಾತನ್ನು ನಂಬಲು ಸಾಧ್ಯವೆ’ ಎಂದು ಪ್ರಶ್ನಿಸಿದರು.
‘ಬಾಗಿನ ಕೊಡುವುದು ಹಿಂದೂ ಸಂಸ್ಕೃತಿಯ ಸಂಪ್ರದಾಯ. ಇದು ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ. ಜನಪ್ರತಿನಿಧಿಗಳು ಜನರಿಂದ ದೂರ ಇರುವಾಗ ಸಚ್ಚಿದಾನಂದ ಚುನಾವಣೆಯಲ್ಲಿ ಸೋತರೂ ಜನರ ಮಧ್ಯೆಯೇ ಇದ್ದಾರೆ. ಹಲವು ಸಾಮಾಜಿಕ ಕಾರ್ಯ ಹಮ್ಮಿಕೊಂಡಿದ್ದಾರೆ. ಇವರಿಗೆ ರಾಜಕೀಯ ಶಕ್ತಿ ತುಂಬಿದರೆ ಮತ್ತಷ್ಟು ಒಳ್ಳೆಯ ಕೆಲಸ ಮಾಡಬಲ್ಲರು’ ಎಂದರು.
ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಮಾತನಾಡಿ, ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದ 40 ಸಾವಿರಕ್ಕೂ ಹೆಚ್ಚು ಮತದಾರರು ನನಗೆ ಮತ ನೀಡಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದಿರುವ ನನ್ನನ್ನು ಮನೆಯ ಮಗನಂತೆ ನೋಡಿಕೊಂಡಿದ್ದಾರೆ. ಚುನಾವಣಾ ಫಲಿತಾಂಶ ಏನೇ ಆದರೂ ಜನರ ಜತೆಗೇ ಇರುತ್ತೇನೆ’ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಇಂದ್ರೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಎಸ್. ಸಿದ್ದರಾಮಯ್ಯ, ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ, ಎಸ್.ಪಿ. ಸ್ವಾಮಿ ಮಾತನಾಡಿದರು.
ಪಕ್ಷದ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್. ರಮೇಶ್, ಪ್ರಧಾನ ಕಾರ್ಯದರ್ಶಿ ಬಿ.ಸಿ. ಸಂತೋಷ್ಕುಮಾರ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಟಿ. ಶ್ರೀಧರ್, ಉಪಾಧ್ಯಕ್ಷ ಬೇವಿನಹಳ್ಳಿ ಮಹೇಶ್, ಕಾರ್ಯದರ್ಶಿ ಮಹದೇವು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಎಲ್. ಲಿಂಗರಾಜು, ಪುರಸಭೆ ಸದಸ್ಯರಾದ ಕೃಷ್ಣಪ್ಪ, ಗಂಜಾಂ ಶಿವು, ಎಸ್. ಪ್ರಕಾಶ್, ಎಸ್.ಟಿ. ರಾಜು, ಎಂ. ಶ್ರೀನಿವಾಸ್, ಚೈತ್ರಾ ಚಂದ್ರಶೇಖರ್, ದರ್ಶನ್ ಲಿಂಗರಾಜು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.