ಮಳವಳ್ಳಿ: ಪ್ರತಿಭಟನೆ ವೇಳೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಏಕವಚನದಲ್ಲಿ ಟೀಕಿಸಿ, ದಲಿತ ಮತ್ತು ಬ್ರಾಹ್ಮಣ ಸಮುದಾಯ ಬಗ್ಗೆ ಮಾತನಾಡಿದ್ದಾರೆ ಎಂಬ ಆರೋಪ ಸಂಬಂಧ ಸಿಪಿಎಂ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಮುಂಭಾಗ ಕೃಷಿ ಕೂಲಿಕಾರರ ಸಂಘಟನೆಗಳ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಶಾಸಕರ ವಿರುದ್ಧ ಟೀಕಿಸಿ ದಲಿತ ಮತ್ತು ಬ್ರಾಹ್ಮಣ ಸಮುದಾಯಗಳನ್ನು ಉಲ್ಲೇಖ ಮಾಡಿ, ಶಾಸಕರ ಎದೆಯ ಮೇಲೆ ಸಿಪಿಎಂ ಬಾವುಟ ಹಾಕುವುದಾಗಿ ಹೇಳಿದ್ದರು. ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.
ಈ ಸಂಬಂಧ ತಾಲ್ಲೂಕಿನ ಹುಲ್ಲೇಗಾಲ ಗ್ರಾಮದ ಎಂ.ಶಿವಕುಮಾರ್ ಎಂಬುವವರು, ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿರುವುದರಿಂದ ಇದು ಮುಂದಿನ ದಿನಗಳಲ್ಲಿ ಕೋಮು ಸಂಘರ್ಷಕ್ಕೆ ಎಡೆಮಾಡಿ ಕೊಡುವ ಸಾಧ್ಯತೆ ಇದೆ. ಇದೊಂದು ದುರುದ್ದೇಶಪೂರಿತ ಹಾಗೂ ಪ್ರಚೋದನಕಾರಿ ಭಾಷಣವಾಗಿದ್ದು, ಶಾಸಕರಿಗೆ ಕೊಲೆ ಬೆದರಿಕೆ ಹಾಕಿರುವ ಕೃಷ್ಣೇಗೌಡ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಐಪಿಸಿ ಕಲಂ 504, 506 ಹಾಗೂ 153ರ ಅಡಿ ಎಫ್.ಐ.ಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.