ಶ್ರೀರಂಗಪಟ್ಟಣ: ‘ಪಟ್ಟಣ ಮತ್ತು ಆಸುಪಾಸಿನಲ್ಲಿರುವ ಪ್ರವಾಸಿ ತಾಣಗಳ ಪರಿಸರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದು ಪುರಸಭೆ ಅಧ್ಯಕ್ಷ ಎಂ.ಎಲ್. ದಿನೇಶ್ ಹೇಳಿದರು.
ಪಟ್ಟಣದ ಕಾವೇರಿ ನದಿ ತೀರದಲ್ಲಿ, ದಸರಾ ಉತ್ಸವದ ನಿಮಿತ್ತ ಶುಕ್ರವಾರ ಏರ್ಪಡಿಸಿದ್ದ ಸ್ವಚ್ಛತಾ ಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಪಟ್ಟಣದ ಸುತ್ತಮುತ್ತಲಿನ ನದಿ ತೀರಗಳಿಗೆ ಹೆಚ್ಚಿನ ಜನರು ಭೇಟಿ ನೀಡುತ್ತಾರೆ. ಪಶ್ಚಿಮವಾಹಿನಿ, ಗೋಸಾಯಿಘಾಟ್, ಕಾವೇರಿ ಸಂಗಮ ಇತರ ಸ್ಥಳಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ರಾಜ್ಯ, ರಾಜ್ಯದ ಜನರು ಬರುತ್ತಾರೆ. ಅಂತಹ ಸ್ಥಳಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಅಭಿಯಾನ ನಡೆಸಲಾಗುವುದು. ಈ ಕಾರ್ಯಕ್ಕೆ ಜಿಲ್ಲಾಡಳಿತ ಮತ್ತು ಸಂಘ, ಸಂಸ್ಥೆಗಳು ಅಗತ್ಯ ಸಹಕಾರ ನೀಡಬೇಕು’ ಎಂದು ಅವರು ಮನವಿ ಮಾಡಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, ‘ನದಿಯ ನೀರು ಮಲಿನ ಆಗದಂತೆ ನೋಡಿಕೊಳ್ಳಬೇಕು. ಮಣ್ಣು ಮತ್ತು ನೀರಿನಲ್ಲಿ ಕರಗದ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಯಂತ್ರಿಸಬೇಕು. ಮಣ್ಣು ಮತ್ತು ನೀರಿನ ಮಲಿನವಾದರೆ ಮನುಷ್ಯರು ಮಾತ್ರವಲ್ಲೆ ಜಲಚರಗಳಿಗೂ ಸಮಸ್ಯೆಯಾಗುತ್ತದೆ. ಸ್ವಚ್ಛತೆಯೇ ಸೇವೆ ಹೆಸರಿನಲ್ಲಿ ಜಿಲ್ಲೆಯಾದ್ಯಂತ 15 ದಿನಗಳ ಕಾಲ ಸಪ್ತಾಹ ಆಚರಿಸಲಾಗುತ್ತಿದ್ದು, ಸ್ಥಳೀಯ ಆಡಳಿತ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.
ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎ.ಬಿ. ವೇಣು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹ ನಿರ್ದೇಶಕ ಓಂ ಪ್ರಕಾಶ್, ಮುಖಂಡರಾದ ಅರಕೆರೆ ಶಿವಯ್ಯ, ತಡಗವಾಡಿ ಯತೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಯೋಜನಾಧಿಕಾರಿ ಎಂ.ಎಂ. ತ್ರಿವೇಣಿ, ನರೇಗಾ ಯೋಜನೆ ಸಹಾಯಕ ನಿರ್ದೇಶಕ ಮೃತ್ಯುಂಜಯ ಇದ್ದರು. ನೆರೆದಿದ್ದವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.