ಮಳವಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಗುರುವಾರ ಟ್ರಾಕ್ಟರ್ ರ್ಯಾಲಿ ನಡೆಸಿದವು.
ಪಟ್ಟಣದ ಶಾಂತಿ ಕಾಲೇಜು ಮುಂಭಾಗದಿಂದ ಹತ್ತಾರು ಟ್ರಾಕ್ಟರ್ಗಳೊಂದಿಗೆ ಕರ್ನಾಟಕ ಪ್ರಾಂತ ರೈತ ಸಂಘ, ವಿವಿಧ ದಲಿತ ಸಂಘಟನೆಗಳು ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ರ್ಯಾಲಿ ನಡೆಸಿ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಕಾರ್ಯದರ್ಶಿ ದೇವಿ ಮಾತನಾಡಿ, ಅತಿವೃಷ್ಟಿ ಮತ್ತು ಅನಾವೃಷ್ಟಿ ನಡುವೆ ಕಷ್ಟಪಟ್ಟ ರೈತ ಬೆಳೆ ಬೆಳೆದರೆ ನ್ಯಾಯಯುತ ಬೆಲೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಪೋರೆಟ್ ಕಂಪನಿಗಳಿಗೆ ವರದಾನವಾಗುವಂಥ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ಮತ್ತು ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಆರೋಪಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಲ್.ಭರತ್ ರಾಜ್ ಮಾತನಾಡಿ, ಪ್ರತಿ ಲೀಟರ್ ಹಾಲಿಗೆ ₹ 50 ನೀಡಬೇಕು. ರೈತರ ಪಂಪ್ಸೆಟ್ಗಳಿಗೆ ಹಗಲು ವೇಳೆಯಲ್ಲಿ ನಿರಂತರವಾಗಿ 8 ಗಂಟೆ ವಿದ್ಯುತ್ ನೀಡಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ತಕ್ಷಣ ಸಾಗುವಳಿ ಪತ್ರ ನೀಡಬೇಕು. ಕಾಡುಪ್ರಾಣಿಗಳ ಹಾವಳಿ ತಡೆದು ರೈತರ ಬೆಳೆಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಎನ್.ಲಿಂಗರಾಜಮೂರ್ತಿ, ಚಿಕ್ಕಸ್ವಾಮಿ. ಹಿಪ್ಜುಲ್ಲಾ, ಅನೀತಾ, ಸುನೀತಾ, ಸುಶೀಲಾ, ಶಿವಕುಮಾರ್, ಗುರುಸ್ವಾಮಿ, ಶಿವಪ್ಪ, ಮರಿಲಿಂಗೌಡ, ಗಣೇಶ್, ಮಹಾದೇವು, ಸತೀಶ್, ಮೂರ್ತಿ, ಪ್ರಕಾಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.