ಪಾಂಡವಪುರ: ವೇತನ ಪರಿಷ್ಕರಣೆ, ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಮುಷ್ಕರ ನಡೆಸಿದ ಕಾರಣ ಪ್ರಯಾಣಿಕರು ಪರದಾಡುವಂತಾಯಿತು.
ಸಾರಿಗೆ ನೌಕರರ 30 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. ಕಳೆದ 2024ರ ಜ.1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಬೇಕು. ಖಾಸಗೀಕರಣ ನಿಲ್ಲಿಸಬೇಕು. ಕಾರ್ಮಿಕರ ಮೇಲಿನ ಕಿರುಕುಳ ನಿಲ್ಲಿಸಬೇಕು. ವಿದ್ಯುತ್ ಚಾಲಿತ ಬಸ್ನಲ್ಲೂ ಸಾರಿಗೆ ಸಂಸ್ಥೆಯ ಚಾಲಕರನ್ನೇ ನಿಯೋಜಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾರಿಗೆ ನೌಕರರು ಮುಷ್ಕರ ನಡೆಸಿದರು.
ಮುಷ್ಕರದಿಂದಾಗಿ ಪಾಂಡವಪುರ ಸಾರಿಗೆ ಬಸ್ ನಿಲ್ದಾಣದಿಂದ ಬಸ್ ಹೊರಡದ ಕಾರಣ ಖಾಸಗಿ ಬಸ್ ಬಸ್ಗಳಿಗಾಗಿ ಪ್ರಯಾಣಿಕರು ಅವಲಂಬಿತರಾದರು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತೊಂದರೆ ಅನುಭವಿಸಬೇಕಾಯಿತು. ಬಸ್ಗಾಗಿ ಕಾದು ಬೇಸತ್ತ ಕೆಲವರು ಪ್ಯಾಸೆಂಜರ್ ಆಟೋ ಹಾಗೂ ಗೂಡ್ಸ್ ಆಟೊಗಳಲ್ಲಿ ಪ್ರಯಾಣಿಸಬೇಕಾಯಿತು.
ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ಗಳನ್ನು ಡಿಪೊ ಹಾಗೂ ಬಸ್ ನಿಲ್ದಾಣಗಳಲ್ಲೇ ನಿಲುಗಡೆ ಮಾಡಲಾಗಿತ್ತು. ಕೆಲವು ದೂರದ ಬಸ್ಗಳು ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕಮಗಳೂರು, ಹುಬ್ಬಳ್ಳಿ ಕಡೆಗೆ ಅಲ್ಲೊಂದು ಇಲ್ಲೊಂದು ಎಂಬಂತೆ ಪ್ರಯಾಣ ಬೆಳೆಸಿದವು.
ಮುಷ್ಕರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಸಾರ್ವಜನಿಕರು, ಸರ್ಕಾರಿ ನೌಕರರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮುಷ್ಕರದ ಬಿಸಿ ತಟ್ಟಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.