ಮೇಲುಕೋಟೆ (ಮಂಡ್ಯ ಜಿಲ್ಲೆ): ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಕ್ಷೇತ್ರದಲ್ಲಿ ಏ.7ರಂದು ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ. ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆಯಿಂದ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
ಇಲ್ಲಿನ ಚೆಲುವನಾರಾಯಣ ಸ್ವಾಮಿ ದೇವಾಲಯದ ಸಂಪ್ರದಾಯದಂತೆ ಬುಧವಾರ ರಾತ್ರಿ ರೋಹಿಣಿ ನಕ್ಷತ್ರದಲ್ಲಿ ವೈರಮುಡಿ ಬ್ರಹ್ಮೋತ್ಸವಕ್ಕೆ ಅಂಕುರಾರ್ಪಣೆಯೊಂದಿಗೆ ಅಧಿಕೃತ ಚಾಲನೆ ನೀಡಲಾಯಿತು.
ಇಲ್ಲಿನ ಅಕ್ಕತಂಗಿ ಕೊಳ, ಧನುಷ್ ಕೋಟೆ, ರಾಯಗೋಪುರ, ಪಂಚಕಲ್ಯಾಣಿ, ಯೋಗಾನರಸಿಂಹಸ್ವಾಮಿ ಬೆಟ್ಟ ಸೇರಿದಂತೆ ಅನೇಕ ತಾಣಗಳಿಗೆ ₹50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಏ.7ರಂದು ಮಂಡ್ಯ ಜಿಲ್ಲಾ ಖಜಾನೆಯಿಂದ ತಂದ ವಜ್ರಖಚಿತ ವೈರಮುಡಿ ಕಿರೀಟ ಹಾಗೂ ಗಂಡಭೇರುಂಡ ಪದಕ ಸೇರಿದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಆಭರಣಗಳನ್ನು ಶ್ರೀದೇವಿ, ಭೂದೇವಿಯರೊಂದಿಗೆ ಗರುಢಾರೂಢನಾದ ಚಲುವನಾರಾಯಣಸ್ವಾಮಿಗೆ ಅಲಂಕಾರ ಮಾಡಲಾಗುತ್ತದೆ.
‘ಲೋಕ ಕಲ್ಯಾಣಾರ್ಥವಾಗಿ ಅರ್ಧ ಚಂದ್ರಕೃತಿಯ ವೈರಮುಡಿ ಬ್ರಹ್ಮೋತ್ಸವ ಸಡಗರದಿಂದ ಜರುಗಲಿದೆ. ಈ ಬಾರಿಯೂ ಮುಖ್ಯಮಂತ್ರಿ ₹10 ಕೋಟಿ ವಿಶೇಷ ಅನುದಾನ ನೀಡಿದ್ದಾರೆ’ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.