ಶ್ರೀರಂಗಪಟ್ಟಣ: ತಾಲ್ಲೂಕಿನ ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕೆಆರ್ಎಸ್ ಜಲಾಶಯದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು.
ಜಲಾಶಯದ ಮುಖ್ಯ ದ್ವಾರದ ಬಳಿ ಕೆಲಕಾಲ ಮಲಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮುಂದುವರೆಸಿದ ವಾಟಾಳ್ ನಾಗರಾಜ್ ಮತ್ತು ಅವರ ಬಂಬಲಿಗರನ್ನು ಪೊಲೀಸರು ಬಂಧಿಸಿದರು. ಪೊಲೀಸರು ಹಾಗೂ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಗಳು ಪ್ರತಿಭಟನಾಕಾರರನ್ನು ಬ್ಯಾರಿಕೇಡ್ಗಳ ಈಚೆಗೆ ಎತ್ತುಕೊಂಡು ತಂದು ಬಿಡುಗಡೆ ಮಾಡಿದರು. ತಮ್ಮನ್ನು ಬಂಧಿಸಿದ ಪೊಲೀಸರ ವಿರುದ್ಧ ವಾಟಾಳ್ ನಾಗರಾಜ್ ಹರಿಹಾಯ್ದರು. ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಬಿಜೆಪಿ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿದೆ. ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ರೈತರು ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಬೆಂಗಳೂರು, ಮೈಸೂರು, ಚಾಮರಾಜನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕೆರೆ, ಕಟ್ಟೆಗಳು ಬತ್ತಿ ಹೋಗಿವೆ. ರೈತರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ವಾಸ್ತವ ಸ್ಥಿತಿ ಗೊತ್ತಿದ್ದರೂ ರೈತರಿಗೆ ದ್ರೋಹ ಮಾಡುತ್ತಿದೆ ಎಂದು ಅವರು ಟೀಕಿಸಿದರು.
‘ರಾಜ್ಯ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಆದೇಶಕ್ಕೆ ಮನ್ನಣೆ ನೀಡಬಾರದು. ಎಐಡಿಎಂಕೆ ಬೆಂಬಲ ಪಡೆದಿರುವ ಕೇಂದ್ರ ಸರ್ಕಾರ ರಾಜ್ಯದ ವಿರುದ್ಧವಾಗಿದೆ. ಮೇಕೆದಾಟು ಯೋಜನೆಗೂ ತಮಿಳುನಾಡಿಗೂ ಸಂಬಂಧವಿಲ್ಲ. ಒಂದು ವಾರದ ಒಳಗೆ ಉದ್ದೇಶಿತ ಮೇಕೆದಾಟು ಕಾಮಗಾರಿ ಶುರು ಮಾಡಬೇಕು. ಇಲ್ಲದಿದ್ದರೆ ಕನ್ನಡ ಚಳವಳಿ ಪಕ್ಷದಿಂದಲೇ ಶಂಕುಸ್ಥಾಪನೆ ಮಾಡಲಿದ್ದೇವೆ’ ಎಂದು ಹೇಳಿದರು.
ಟಿಪ್ಪು ಜಯಂತಿ ರದ್ದು– ಆಕ್ರೋಶ: ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ. ನಾಡಿನ ರಕ್ಷಣೆಗಾಗಿ ತನ್ನ ಇಬ್ಬರು ಮಕ್ಕಳನ್ನೇ ಒತ್ತೆಯಿಟ್ಟ ದೇಶಪ್ರೇಮಿ. ಆತನ ಜಯಂತಿ ಆಚರಣೆಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಕೂಡ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಟಿಪ್ಪು ಸುಲ್ತಾನ್ ಜಯಂತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲಿಸಬೇಕು. ಟಿಪ್ಪು ಪ್ರತಿಮೆಯನ್ನು ಪಾರ್ಲಿಮೆಂಟ್ ಭವನದ ಮುಂದೆ ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದರು.
ಪಾರ್ಥಸಾರಥಿ, ವಿಶ್ವನಾಥಗೌಡ, ಮುನ್ನಾ ಇತರರು ಜತೆಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.