ಮಹದೇವಪುರ ಬಳಿ ಕನಕದಾಸರು ಧ್ಯಾನ ಮಾಡಿರುವ ಕನಕ ಬಂಡೆ ಸ್ಥಳವನ್ನು ಅಭಿವೃದ್ಧಿಪಡಿಸಬೇಕು ಎಂಬ ಹಿನ್ನೆಲೆಯಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರವಿ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ರಾಘವೇಂದ್ರ, ತಹಶೀಲ್ದಾರ್ ಪರಶುರಾಂ ಸತ್ತಿಗೇರಿ, ಕನಕ ಶ್ರೀ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಕಾರ್ಯದರ್ಶಿ ಸಿದ್ದರಾಜು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಶ್ರೀರಂಗಪಟ್ಟಣ: ‘ತಾಲ್ಲೂಕಿನ ಮಹದೇವಪುರ ಬಳಿ ಕನಕದಾಸರು ಧ್ಯಾನ ಮಾಡಿರುವ ‘ಕನಕನ ಬಂಡೆ’ ಸ್ಥಳವನ್ನು ಕೂಡಲ ಸಂಗಮ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದು, ನೀಲನಕ್ಷೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರವಿ ತಿಳಿಸಿದರು.
ಕನಕನ ಬಂಡೆ ಸ್ಥಳಕ್ಕೆ ಶುಕ್ರವಾರ ಪ್ರವಾಸೋದ್ಯಮ, ಕಾವೇರಿ ನೀರಾವರಿ ನಿಗಮ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಜತೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ‘ಈ ಮಹತ್ವದ ಸ್ಥಳವನ್ನು ಅಭಿವೃದ್ಧಿ ಮಾಡುವ ಕುರಿತು ಯೋಜನಾ ನಿರ್ದೇಶಕರನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು. ಅಂದಾಜು ವೆಚ್ಚ ಮತ್ತು ಯೋನೆಯ ಪಿಪಿಟಿಯನ್ನು ಸಿದ್ಧಪಡಿಸಲಾಗುವುದು. ಕಾಲ ಕಾಲಕ್ಕೆ ಅಧಿಕಾರಿಗಳು ಮತ್ತು ಸ್ಥಳೀಯರ, ಮುಖಂಡರ ಸಭೆ ನಡೆಸಿ ಸಲಹೆ, ಸಹಕಾರ ಪಡೆಯಲಾಗುವುದು’ ಎಂದು ತಿಳಿಸಿದರು.
ಕನಕ ಶ್ರೀ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಕಾರ್ಯದರ್ಶಿ ಸಿದ್ದರಾಜು ಮಾತನಾಡಿ, ‘ಕನಕನ ಬಂಡೆ ಸ್ಥಳವನ್ನು ಕೂಡಲ ಸಂಗಮ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಸಂಬಂಧ ಟ್ರಸ್ಟ್ ಮೂರು ವರ್ಷಗಳಿಂದ ಸಚಿವರು, ಶಾಸಕರು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದೆ. ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಶಂಕರ್ ಕೆಲವು ದಿನಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿ ಅಭಿವೃದ್ಧಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು’ ಎಂದರು.
ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ಮೈಸೂರು ವಿ.ವಿ ನಿವೃತ್ತ ಪ್ರಾಧ್ಯಾಪಕ ರಂಗರಾಜು, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಜಯಂತ್, ತಹಶೀಲ್ದಾರ್ ಪರಶುರಾಮ ಸತ್ತಿಗೇರಿ, ಕಂದಾಯ ನಿರೀಕ್ಷಕ ಟಿ.ಪಿ. ರೇವಣ್ಣ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜು, ಕನಕ ಶ್ರೀ ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.