ಶ್ರೀರಂಗಪಟ್ಟಣ: ರಾಜ್ಯ ಸರ್ಕಾರವು ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ರೈತರು ದೂರಿದ್ದಾರೆ.
ಮಂಗಳವಾರ ರಾತ್ರಿಯಿಂದ ಕಾವೇರಿ ನದಿಗೆ 2,500 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ವಿಶ್ವೇಶ್ವರಯ್ಯ ಹಾಗೂ ಇತರ ನಾಲೆಗಳು ಸುಮಾರು 3,500 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ರೈತರ ಆರೋಪವನ್ನು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಳ್ಳಿ ಹಾಕಿದ್ದಾರೆ.
‘ನದಿ ಒಡ್ಡಿನ ನಾಲೆಗಳಾದ ವಿರಿಜಾ, ಸಿಡಿಎಸ್, ಬಂಗಾರದೊಡ್ಡಿ ಇತರ ನಾಲೆಗಳಿಗೆ ಹಲವು ದಿನಗಳಿಂದ ಹರಿಸುತ್ತಿದ್ದ ನೀರು ಮಂಗಳವಾರ ಸಂಜೆಯಿಂದ ಬಂದ್ ಆಗಿದೆ. ಅದೇ ನೀರನ್ನು ನದಿಗೆ ಹರಿಸಲಾಗುತ್ತಿದೆ’ ಎಂದು ನಿಗಮದ ಎಂಜಿನಿಯರೊಬ್ಬರು ತಿಳಿಸಿದ್ದಾರೆ.
ಬೆಂಗಳೂರು ಹಾಗೂ ಇತರ ನಗರಗಳಿಗೆ ಕುಡಿಯುವ ಉದ್ದೇಶಕ್ಕೆ ನದಿಗೆ ನೀರು ಹರಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.
ಆಕ್ರೋಶ: ‘ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 112.57 ಅಡಿಗೆ ಕುಸಿದಿದೆ. ಇಂತಹ ಸಂದರ್ಭದಲ್ಲಿ ಸರ್ಕಾರವು ತಮಿಳುನಾಡಿಗೆ ನೀರು ಹರಿಸಿ ರಾಜ್ಯದ ರೈತರಿಗೆ ದ್ರೋಹ ಎಸಗುತ್ತಿದೆ’ ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಳಾಗಾಲ ಕೃಷ್ಣೇಗೌಡ ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.