ADVERTISEMENT

ಕಾಮಗಾರಿ; ವಾಹನ ಸವಾರರ ಪರದಾಟ

ಮದ್ದೂರು ಪಟ್ಟಣ ವ್ಯಾಪ್ತಿಯಲ್ಲಿ ನಡೆಯುತ್ತಿರುವ ದಶಪಥ ನಿರ್ಮಾಣ

ಎಂ.ಆರ್.ಅಶೋಕ್ ಕುಮಾರ್
Published 18 ಅಕ್ಟೋಬರ್ 2021, 7:25 IST
Last Updated 18 ಅಕ್ಟೋಬರ್ 2021, 7:25 IST
ಮದ್ದೂರು ಪಟ್ಟಣದ ವ್ಯಾಪ್ತಿಯಲ್ಲಿ ಫ್ಲೈಓವರ್‌ ಕಾಮಗಾರಿ ನಡೆಯುತ್ತಿರುವುದರಿಂದ ಹೆದ್ದಾರಿಯಲ್ಲಿ ಹಾಗೂ ಪಟ್ಟಣದ ಒಳ ಪ್ರದೇಶ ಸಂಪರ್ಕಿಸುವ ರಸ್ತೆಗಳು ಹದಗೆಟ್ಟಿದ್ದು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ
ಮದ್ದೂರು ಪಟ್ಟಣದ ವ್ಯಾಪ್ತಿಯಲ್ಲಿ ಫ್ಲೈಓವರ್‌ ಕಾಮಗಾರಿ ನಡೆಯುತ್ತಿರುವುದರಿಂದ ಹೆದ್ದಾರಿಯಲ್ಲಿ ಹಾಗೂ ಪಟ್ಟಣದ ಒಳ ಪ್ರದೇಶ ಸಂಪರ್ಕಿಸುವ ರಸ್ತೆಗಳು ಹದಗೆಟ್ಟಿದ್ದು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ   

ಮದ್ದೂರು: ಪಟ್ಟಣದ ವ್ಯಾಪ್ತಿಯಲ್ಲಿ ಹಾದು ಹೋಗುವ ಮೈಸೂರು- ಬೆಂಗ ಳೂರು ದಶಪಥ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ಮುಂಜಾಗ್ರತಾ ಕ್ರಮ ಅನುಸರಿಸದೆ ಇರುವುದರಿಂದ ಪಟ್ಟಣ ವ್ಯಾಪ್ತಿಯಲ್ಲಿ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.

ಸುಮಾರು ಒಂದೂವರೆ ವರ್ಷದಿಂದ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿಯಿಂದಾಗಿ ಸ್ಥಳೀಯರು ಹಾಗೂ ಮದ್ದೂರು ಪಟ್ಟಣದ ಮೂಲಕ ಸಂಚರಿಸುವ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಮೈಸೂರು ದಸರಾ ವೀಕ್ಷಿಸಲು ವಿವಿಧೆಡೆಯಿಂದ ಮದ್ದೂರು ಮೂಲಕ ತೆರಳುತ್ತಿದ್ದವರು ರಸ್ತೆಯಲ್ಲೇ ಕಾಲುವೆ ಯಂತೆ ಹರಿಯುತ್ತಿರುವ ಒಳಚರಂಡಿ ನೀರಿನಿಂದ ತೊಂದರೆಗೊಳಗಾದರು. ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ, ಕೋರ್ಟ್ ಪಕ್ಕ, ತಾಲ್ಲೂಕು ಕಚೇರಿ ಮುಂದೆ ಸೇರಿದಂತೆ ವಿವಿಧೆಡೆ ಒಳ ಚರಂಡಿ ಸಂಪರ್ಕದ ಪೈಪ್‌ಗಳು ಹೆದ್ದಾರಿ ಕಾಮಗಾರಿ ವೇಳೆ ಹಾಳಾಗಿವೆ. ಇದರಿಂದಾಗಿ ಒಳಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿದೆ. ರಾತ್ರಿ ವೇಳೆ ಸಂಚರಿಸುವ ವಾಹನ ಚಾಲಕರಿಗೆ ರಸ್ತೆಯ ಅಂದಾಜು ಸಿಗುತ್ತಿಲ್ಲ.

ADVERTISEMENT

ವಿವಿಧೆಡೆ ಹೆದ್ದಾರಿ ಕಾಮಗಾರಿ ನಡೆಸಲು ಕಬ್ಬಿಣದ ತಡೆಗೋಡೆ ಹಾಕಿರುವುದರಿಂದ ರಸ್ತೆ ಕಿರಿದಾಗಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಪ್ರತಿಫಲಕ ಅಳವಡಿಸದೆ ಇರುವುದರಿಂದ ರಾತ್ರಿ ವೇಳೆ ವಾಹನ ಸವಾರರು ಪ್ರತಿದಿನ ಸಮಸ್ಯೆ ಅನುಭವಿಸುತ್ತಿದ್ದಾರೆ.

ಮದ್ದೂರಿನಲ್ಲಿ ಫ್ಲೈಓವರ್ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ಕಿರಿದಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಹೆದ್ದಾರಿ ಬಳಿ ವಿದ್ಯುತ್ ದೀಪಗಳಿಲ್ಲದೆ ರಾತ್ರಿಯ ವೇಳೆವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ನಡೆಸುತ್ತಿರುವವರು ಕೂಡಲೇ ಗಮನ ಹರಿಸಿ, ಕ್ರಮ ಕೈಗೊಳ್ಳುವುದರ ಮೂಲಕ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯ ನಿವಾಸಿ ಅಪ್ಪಾಜಿ ಮಂಜುನಾಥ್ ಒತ್ತಾಯಿಸಿದ್ದಾರೆ.

ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ದಿಲೀಪ್ ಬಿಲ್ಡ್‌ಕಾನ್‌ ಸಂಸ್ಥೆಯ ಅಧಿಕಾರಿಗಳು ಕಾಮಗಾರಿ ಆರಂಭಿಸುವ ಮುನ್ನ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಸ್ಥಳೀಯ ಪುರಸಭೆಯ ಅಧಿಕಾರಿಗಳಿಗೂ ಸರಿಯಾದ ಮಾಹಿತಿ ನೀಡದೆ ಇರುವುದರಿಂದ ಹಲವಾರು ಕಡೆ ಸಮಸ್ಯೆಗಳಾಗುತ್ತಿದೆ. ಹೆದ್ದಾರಿ ಕಾಮಗಾರಿ ನಡೆಸುವ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ ಎಂದು ಮದ್ದೂರು ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.