ಶ್ರೀರಂಗಪಟ್ಟಣ: ‘ಅಧಿಕ ರಕ್ತದೊತ್ತಡ ಸದ್ದಿಲ್ಲದ ಕೊಲೆಗಾರನಾಗಿದ್ದು ವರ್ಷದಲ್ಲಿ ಎರಡು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಸಲಹೆ ನೀಡಿದರು.
ತಾಲ್ಲೂಕಿನ ನಗುವನಹಳ್ಳಿಯಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿಯವರ ಕಚೇರಿ ಮತ್ತು ಆಯುಷ್ಮಾನ್ ಆರೋಗ್ಯ ಮಂದಿರದ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಮದ್ಯಪಾನ, ಧೂಮಪಾನ ಮತ್ತು ಕರಿದ ಆಹಾರ ಪದಾರ್ಥಗಳ ಸೇವನೆ ಅಧಿಕ ರಕ್ತದೊತ್ತಡಕ್ಕೆ ಕಾರಣ. ಒಮ್ಮೆ ಈ ಕಾಯಿಲೆ ಕಾಣಿಸಿಕೊಂಡರೆ ಜೀವನ ಪರ್ಯಂತ ಕಾಡುತ್ತದೆ. ಸಮತೋಲಿತ ಆಹಾರ ಸೇವನೆ, ಧ್ಯಾನ, ಯೋಗಾಭ್ಯಾಸದಿಂದ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು’ ಎಂದು ಅವರು ತಿಳಿಸಿದರು.
ಸಾಂಕ್ರಾಮಿಕ ರೋಗಶಾಸ್ತ್ರಜ್ಞೆ ಮೇಘನಾ ಮಾತನಾಡಿ, ‘ಅಧಿಕ ರಕ್ತದೊತ್ತಡದಿಂದ ಬಳಲುವವರಲ್ಲಿ ಇತರ ಆರೋಗ್ಯ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸಬೇಕು’ ಎಂದರು.
ಡಾ.ನಾನಾ ಚವ್ಹಾಣ್, ಡಾ.ಶ್ರೀಲಕ್ಷ್ಮಿ, ಆರೋಗ್ಯ ಶುಶ್ರೂಣಾಧಿಕಾರಿ ಸೌಮ್ಯಾ, ಸುಮಾ, ನೇತ್ರಾವತಿ, ಲೀಲಾ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.