ADVERTISEMENT

ಅಸಂಘಟಿತ ಕಾರ್ಮಿಕರ ಪ್ರತಿಭಟನೆ

ಸಾಮಾಜಿಕ ಭದ್ರತೆ ಒದಗಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2012, 10:34 IST
Last Updated 18 ಡಿಸೆಂಬರ್ 2012, 10:34 IST

ಪಿರಿಯಾಪಟ್ಟಣ: ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆಯ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕರು ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಟ್ಟಣದ ಸರ್ಕಲ್ ಇನ್‌ಸ್ಪೆಕ್ಟರ್ ಕಚೇರಿಯ ಮುಂಭಾಗದಿಂದ ಮೆರವಣಿಗೆ ಹೊರಟ ನೂರಾರು ಮಂದಿ ಅಸಂಘಟಿತ ಕಾರ್ಮಿಕರು ಬಿ.ಎಂ.ರಸ್ತೆಯ ಮೂಲಕ ಸಾಗಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಮಹಾರಾಷ್ಟ್ರ ರಾಜ್ಯದ ಮಾದರಿಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪಿಸಬೇಕು. ಕಾರ್ಮಿಕರ ಕಾನೂನುಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಕೆಎಸ್‌ಎಸ್ ಸಂಘಟನೆಯ ರಾಜ್ಯ ಸಂಚಾಲಕ ವರದರಾಜೇಂದ್ರ ಮಾತನಾಡಿ, ಸರ್ಕಾರ ಬಂಡವಾಳಶಾಹಿಗಳ ಪರವಾಗಿದ್ದು, ಭ್ರಷ್ಟಾಚಾರದ್ಲ್ಲಲಿ ಮುಳುಗಿದೆ. ಎ್ಲ್ಲಲ ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ಕಿತ್ತಾಡುತ್ತಿವೆ, ವಿನಾ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿಲ್ಲ. ಆದ್ದರಿಂದ ಅಸಂಘಟಿತ ಕಾರ್ಮಿಕರು ಸಂಘಟನೆಯಾಗಿ ಸರ್ಕಾರದ ಮೇಲೆ ಒತ್ತಡ ತಂದು ಕಾರ್ಮಿಕರ ಹಿತ ಕಾಯುವ ಕಾನೂನುಗಳನ್ನು ಜಾರಿಗೆ ಬರುವಂತೆ ಮಾಡಬೇಕಿದೆ ಎಂದು ಹೇಳಿದರು. ಪಟ್ಟಣದ ಲೋಡರ್ಸ್‌ ಅಸೋಸಿಯೇಷನ್ ಅಧ್ಯಕ್ಷ ಉಮೇಶ್ ಮಾತನಾಡಿದರು.

ಮೆರವಣಿಗೆ ಮೂಲಕ ತೆರಳಿದ ಪ್ರತಿಭಟನಾಕಾರರು ತಹಶೀಲ್ದಾರ್ ಸತ್ಯನಾರಾಯಣರಾವ್ ಅವರಿಗೆ ಮನವಿ ಸಲ್ಲಿಸಿದರು. ಕೆಎಸ್‌ಎಸ್ ಕಾನೂನು ಸಲಹೆಗಾರ ಗಾನ್ಸ್ ಲವೇಸ್, ಜಿಲ್ಲಾ ಉಪಾಧ್ಯಕ್ಷ ಕೆ.ಕರಿಯಪ್ಪ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ, ಮಾಜಿ ಆಧ್ಯಕ್ಷ ಮಹಮ್ಮದ್ ರಫೀಕ್, ಲಾರಿ ಚಾಲಕರ ಸಂಘದ ಅಧ್ಯಕ್ಷ ಶಂಕರ್, ಕೊಪ್ಪ ಲೋಡರ್ಸ್‌ ಅಸೋಸಿಯೇಷನ್ ಅಧ್ಯಕ್ಷ ಗೌಸ್‌ಮೋಹಿನುದ್ದೀನ್, ಆನಂದ್, ಶಂಭು, ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.