ADVERTISEMENT

ಎಐಟಿಯುಸಿ ಜೈಲ್ ಭರೋ ಚಳವಳಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2012, 8:10 IST
Last Updated 20 ಡಿಸೆಂಬರ್ 2012, 8:10 IST

ಮೈಸೂರು: ಕೇಂದ್ರೀಯ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ದೇಶವ್ಯಾಪಿ ಬುಧವಾರ ಹಮ್ಮಿಕೊಂಡಿದ್ದ ಜೈಲ್ ಭರೊ ಚಳವಳಿಯನ್ನು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ನಗರದಲ್ಲಿ ನಡೆಸಿತು.

ನಗರದ ನೆಹರು ವೃತ್ತದ ಮುಖ್ಯ ಅಂಚೆ ಕಚೇರಿ ಮುಂಭಾಗ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ.

ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಘೋಷಣೆಗಳನ್ನು ಕೂಗಿದರು.ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸಲು ಕಠಿಣ ಕ್ರಮ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಾರ್ವತ್ರಿಕ ಸಾಮಾಜಿಕ ಭದ್ರತೆ ಮತ್ತು ರಾಷ್ಟ್ರೀಯ ಸಾಮಾಜಿಕ ಭದ್ರತೆ ನಿಧಿ, ಕೇಂದ್ರ ಮತ್ತು ರಾಜ್ಯ ಸಾರ್ವಜನಿಕ ಉದ್ದಿಮೆಗಳಲ್ಲಿ ಬಂಡವಾಳ ಹಿಂತೆಗೆತ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಾಯಂ ಹಾಗೂ ನಿರಂತರ ಸ್ವರೂಪದ ಕೆಲಸಗಳನ್ನು ಗುತ್ತಿಗೆ ನೀಡದಂತೆ ಹಾಗೂ ಅಲ್ಲಿವರೆಗೆ ಕೈಗಾರಿಕೆ/ಸಂಸ್ಥೆಗಳಲ್ಲಿ ಕೆಲಸಗಾರರಿಗೆ ನೀಡಲಾಗುವ ವೇತನ ಸೌಲಭ್ಯಗಳನ್ನು ಗುತ್ತಿಗೆ ಕಾರ್ಮಿಕರಿಗೂ ಸಿಗುವಂತೆ ಕ್ರಮ ವಹಿಸಬೇಕು.

ಅಸಂಘಟಿತ ವಲಯದ ಕಾರ್ಮಿಕರಿಗೆ ತಿಂಗಳಿಗೆ ರೂ.10 ಸಾವಿರ ಕಡಿಮೆ ಇಲ್ಲದಂತೆ ಶಾಸನಬದ್ಧ ಕೂಲಿಯನ್ನು ನಿಗದಿಪಡಿಸಬೇಕು. ಬೋನಸ್, ಭವಿಷ್ಯ ನಿಧಿ ಪಾವತಿಸಿರುವ ಎಲ್ಲ ಮಿತಿ ಹಾಗೂ ಅರ್ಹತಾ ನಿರ್ಬಂಧ ತೆಗೆದುಹಾಕಿ ಎಲ್ಲರಿಗೂ ನಿವೃತ್ತಿ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 50 ಕ್ಕೂ ಹೆಚ್ಚು ಮಂದಿ ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT