ಮೈಸೂರು: ಮಕ್ಕಳ ಶಿಕ್ಷಣ ಕಾಯ್ದೆಯಡಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ನಿರಾಕರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆಯು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ಖಾಸಗಿ ವಿದ್ಯಾಸಂಸ್ಥೆಗಳ ವ್ಯಾಪಾರಿ ದಂಧೆಗೆ ಕಡಿವಾಣ ಹಾಕಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಡ ಮಕ್ಕಳಿಗೆ ಶಿಕ್ಷಣ ಒದಗಿಸಬೇಕಿದ್ದ ಜಿಲ್ಲೆಯ ಶಿಕ್ಷಣ ಅಧಿಕಾರಿಗಳು ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯಡಿ ದಾಖಲಾತಿ ಬಯಸಿದ ಅರ್ಹ ಬಡ ಮಕ್ಕಳಿಗೆ ಪ್ರವೇಶ ನೀಡದೆ ವಂಚಿಸುತ್ತಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಂದು ತರಗತಿಯಲ್ಲಿ ಕನಿಷ್ಠ 40 ವಿದ್ಯಾರ್ಥಿಗಳು ಪ್ರವೇಶ ಪಡೆಯುವ ಅವಕಾಶವಿದೆ. ಅದರಲ್ಲಿ 10 ವಿದ್ಯಾರ್ಥಿಗಳು ಆರ್ಟಿಇ ಕಾಯ್ದೆ ಯಡಿ ದಾಖಲಾಗಬೇಕು. ಅದರಂತೆ ಪ್ರವೇಶ ಬಯಸಿ ಸಲ್ಲಿಸಿದ ಅರ್ಜಿಗಳನ್ನು ಕ್ರೋಡೀಕರಿಸಿ ಎಲ್ಕೆಜಿ ಮತ್ತು 1ನೇ ತರಗತಿಗೆ ದಾಖಲಾಗುವ ಒಟ್ಟು 40 ಮಕ್ಕಳ ಪಟ್ಟಿ ತಯಾರಿಸಿ ಅದರಲ್ಲಿ ಶೇ 25ರಷ್ಟು ಆರ್ಟಿಇ ಕಾಯ್ದೆಗೆ ಒಳಪಡುವ ಮಕ್ಕಳಿಗೆ ನೀಡಬೇಕು.
ಜಿಲ್ಲೆಯಲ್ಲಿ 2012ನೇ ಸಾಲಿನಲ್ಲಿ 5,305 ಸೀಟು ಲಭ್ಯವಿದ್ದು, 2013ನೇ ಸಾಲಿಗೆ 5,271 ಸೀಟುಗಳು ಲಭ್ಯವಿರು ವುದಾಗಿ ತಿಳಿಸಿದೆ. ಕಳೆದ ಸಾಲಿಗಿಂತ ಈ ಸಾಲಿನಲ್ಲಿ ಸೀಟುಗಳ ಪ್ರಮಾಣ ಕಡಿಮೆಯಾಗಿದೆ. ಹಾಗಾದರೆ ಖಾಸಗಿ ಶಾಲೆಗಳನ್ನು ಮುಚ್ಚಲು ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರಶ್ನಿಸಿದರು.
ಮೈಸೂರು ಉತ್ತರ ವಲಯ ವ್ಯಾಪ್ತಿಗೆ ಬರುವ ಛಾಯಾದೇವಿ ವಿದ್ಯಾಸಂಸ್ಥೆಯಲ್ಲಿ ಆರ್ಟಿಇ ಕಾಯ್ದೆಯಡಿ ಪ್ರವೇಶ ಪಡೆದಿರುವ ಚೇತನ್ ಎಂಬ ವಿದ್ಯಾರ್ಥಿಗೆ ಶುಲ್ಕ ಪಾವತಿಸುವಂತೆ ಒತ್ತಾಯಿಸಿ ಬಿಸಿಲಿನಲ್ಲಿ ನಿಲ್ಲಿಸಿರುವ ಬಗ್ಗೆ ಪೋಷಕರಿಂದ ದೂರು ಬಂದಿದ್ದರೂ ಅಧಿಕಾರಿಗಳು ಇದುವರೆಗೂ ಕ್ರಮ ಕೈಗೊಂಡಿಲ್ಲ.
ಶಿಕ್ಷಣ ಕೇವಲ ಉಳ್ಳವರ ಪಾಲಾಗುತ್ತಿದೆ. ಸಮಾನ ಶಿಕ್ಷಣ ಸಿಗಬೇಕೆಂದು ಸುಪ್ರೀಂ ಕೋರ್ಟ್ ಹೊರಡಿಸಿದ ಆದೇಶವನ್ನು ಅಧಿಕಾರಿ ಗಳು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ನಿಂದನೆ ಮಾಡಿರುವ ಡಿಡಿಪಿಐ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಜಿಲ್ಲಾ ಸಂಘಟನಾ ಸಂಚಾಲಕ ರಾದ ಆಲಗೂಡು ಶಿವಕುಮಾರ್, ಶಂಭುಲಿಂಗಸ್ವಾಮಿ, ರತ್ನಪುರಿ ಪುಟ್ಟಸ್ವಾಮಿ, ಚೋರನಹಳ್ಳಿ ಶಿವಣ್ಣ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.