ADVERTISEMENT

ಪರ್ರಿಕರ್ ವಿರುದ್ಧ ಅರೆಬೆತ್ತಲೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2017, 5:23 IST
Last Updated 30 ಡಿಸೆಂಬರ್ 2017, 5:23 IST

ಮೈಸೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಚಳವಳಿಗಾರರ ಸಂಘದ ಕಾರ್ಯಕರ್ತರು ಶುಕ್ರವಾರ ಅರಬೆತ್ತಲೆ ಪ್ರತಿಭಟನೆ ನಡೆಸಿದರು.

‘ಕಾಡಾ’ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಗೋವಾ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮಡಿಕೆಗಳನ್ನು ಹಿಡಿದು ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಅವಮಾನಿಸಿದರು.

ಗೋವಾದ ಹಟಮಾರಿ ಧೋರಣೆಯಿಂದ ಉತ್ತರ ಕರ್ನಾಟಕದಲ್ಲಿ ನೀರಿಗೆ ತತ್ವಾರ ಉಂಟಾಗಿದೆ. ರಾಜಕೀಯ ಪಕ್ಷಗಳು ಇದನ್ನು ಚುನಾವಣೆಯ ವಿಷಯವನ್ನಾಗಿ ಮಾಡಿಕೊಳ್ಳುತ್ತಿವೆ. ಪ್ರತಿ ಚುನಾವಣೆ ಬಂದಾಗಲೂ ಇದು ಚರ್ಚೆಗೆ ಬರುತ್ತಿದೆ. ಆದರೆ, ರೈತರಿಗೆ ಮಾತ್ರ ನೀರು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಕಳಸಾ–ಬಂಡೂರಿ ಯೋಜನೆ ಜಾರಿಯಾದರೆ ಉತ್ತರ ಕರ್ನಾಟಕದ ನೀರಿನ ಸಮಸ್ಯೆ ಪರಿಹಾರವಾಗಲಿದೆ. ಕುಡಿಯುವ ನೀರಿಗೆ ಆಗ್ರಹಿಸಿ ಐದು ಜಿಲ್ಲೆಯ ರೈತರು ಎರಡೂವರೆ ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ಸಮಸ್ಯೆ ಪರಿಹಾರವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾಹಿತಿ ಮಳಲಿ ವಸಂತಕುಮಾರ್‌, ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್‌, ಪ್ರಧಾನ ಕಾರ್ಯದರ್ಶಿ ಗುರುಶಂಕರ್, ಉಪಾಧ್ಯಕ್ಷ ಬಸವರಾಜು, ಸಂಘಟನಾ ಕಾರ್ಯದರ್ಶಿ ಸೋಗಳ್ಳಿ ತುಂಗಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.