ADVERTISEMENT

ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2012, 6:30 IST
Last Updated 22 ಅಕ್ಟೋಬರ್ 2012, 6:30 IST

ಮೈಸೂರು: `ಪೊಲೀಸರನ್ನು ನೋಡುವ ಸಮಾಜದ ದೃಷ್ಟಿಕೋನ ಬದಲಾಗ ಬೇಕು~ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮೋಹನ್ ಶ್ರೀಪಾದ ಸಂಕೊಳ್ಳಿ ತಿಳಿಸಿದರು.

ಜಿಲ್ಲಾ ಪೊಲೀಸ್, ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಕೆಎಸ್‌ಆರ್‌ಪಿ ಘಟಕ ಸಂಯುಕ್ತವಾಗಿ ನಗರದ ಎಸ್ಪಿ ಕಚೇರಿ ಬಳಿ ಇರುವ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ `ಹುತಾತ್ಮರ ದಿನಾಚರಣೆ~ಯಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಮಾತನಾಡಿದರು.

`ದೇಶದ ಆಂತರಿಕ ಭದ್ರತೆಯನ್ನು ಕಾಪಾಡುವ ಹೊಣೆಗಾರಿಕೆ ಪೊಲೀಸರ ಮೇಲೆ ಇದೆ. ಉಗ್ರರ ಉಪಟಳ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಸಮರ್ಥವಾಗಿ ಕೆಲಸ ನಿರ್ವಹಿಸಬೇಕಾಗಿದೆ. ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ಸಂಬಂಧ ಕುಸಿಯುತ್ತಿದೆ. ಇದರಿಂದ ಪೊಲೀಸರು ಹತಾಶರಾಗಿದ್ದಾರೆ. ಹಾಗಾಗಿ ಪೊಲೀಸರ ಒಳ್ಳೆಯ ಗುಣಗಳನ್ನು ಸಮಾಜ ಅರ್ಥ ಮಾಡಿಕೊಳ್ಳಬೇಕು~ ಎಂದು ಹೇಳಿದರು.

`ಜವಾಹರಲಾಲ್ ನೆಹರು ಅವರು ಪೊಲೀಸ್ ಕೆಲಸ ಕಷ್ಟ ಎಂದು ಹೇಳಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಕಿರಣ್ ಬೇಡಿ ಅವರು ಹುತಾತ್ಮರಿಗೆ ಸರಿಯಾದ ಗೌರವ ಸಿಗುತ್ತಿಲ್ಲ ಎಂಬುದನ್ನು ತಮ್ಮ ಪುಸ್ತಕದಲ್ಲಿ ಪ್ರಸ್ತಾಪಿಸಿದ್ದಾರೆ. ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯ ಇದೆ~ ಎಂದು ತಿಳಿಸಿದರು.

ಅತಿಥಿಗಳು ಮತ್ತು ಆಹ್ವಾನಿತರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಗಳನ್ನು ಅರ್ಪಿಸಿ ಗೌರವ ಸಲ್ಲಿಸಿದರು. ಈ ವರ್ಷ ಹುತಾತ್ಮರಾದ 566 ಮಂದಿ ಸಿಬ್ಬಂದಿಯ ಹೆಸರನ್ನು ಜಿಲ್ಲಾ ಎಸ್ಪಿ ಆರ್.ದಿಲೀಪ್ ವಾಚಿಸಿದರು.

ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಬಿಪಿನ್ ಗೋಪಾಲಕೃಷ್ಣ, ದಕ್ಷಿಣ ವಲಯ ಐಜಿಪಿ ಡಾ.ಕೆ.ರಾಮಚಂದ್ರರಾವ್, ನಗರ ಪೊಲೀಸ್ ಕಮಿಷನರ್ ಕೆ.ಎಲ್. ಸುಧೀರ್, ಕೆಎಸ್‌ಆರ್‌ಪಿ ಕಮಾಂಡೆಂಟ್ ಕೃಷ್ಣಪ್ಪ, ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ, ಲೋಕಾಯುಕ್ತ ಎಸ್ಪಿ ಎಸ್.ಎಂ.ಜಗದೀಶ್ ಪ್ರಸಾದ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಡಾ.ಯೂನಸ್ ಅಲಿ ಕೌಸರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.