ADVERTISEMENT

`ಭಿನ್ನಾಭಿಪ್ರಾಯ ಮರೆತು ಪಕ್ಷದ ಗೆಲುವಿಗೆ ಶ್ರಮಿಸಿ'

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2013, 8:49 IST
Last Updated 9 ಏಪ್ರಿಲ್ 2013, 8:49 IST

ಪಿರಿಯಾಪಟ್ಟಣ:  ಸಣ್ಣಪುಟ್ಟ ಭಿನ್ನಾಭಿಪ್ರಾಯ ಮರೆತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಗೆಲುವು ಸಾಧ್ಯ ಎಂದು ಶಾಸಕ  ಕೆ.ವೆಂಕಟೇಶ್ ಹೇಳಿದರು.

ಆದಿಚುಂಚನಗಿರಿ ಸಮುದಾಯಭವನದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ನಡೆದ `ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉದಾಸೀನ ಮನೋಭಾವ ತಾಳದೆ ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಮನವಿ ಮಾಡಿದರು. ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್ ಅವರು ಮತದಾರರ ಕಾಲು ಹಿಡಿಯುತ್ತಾ ಗಿಮಿಕ್ ರಾಜಕೀಯ ಮಾಡಲು ಮುಂದಾಗುತ್ತಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡುತ್ತಿದ್ದೇವೆ. ಇದಕ್ಕೆ ಜನತೆಯ ಬೆಂಬಲ ಅಗತ್ಯ. ನಾನು ಕಾಂಗ್ರೆಸ್ ಪಕ್ಷಕ್ಕೆ ಸದಾ ನಿಷ್ಠೆಯಿಂದ ಇದ್ದೇನೆ. ಅಡ್ಡಮತದಾನ ಸೇರಿದಂತೆ ಪಕ್ಷಕ್ಕೆ ಎಂದಿಗೂ ದ್ರೋಹ ಮಾಡಿಲ್ಲ ಎಂದರು.  ಸಮಾರಂಭದಲ್ಲಿ 400ಕ್ಕೂ ಹೆಚ್ಚು ಮಂದಿ ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಪಟ್ಟಣ ಪಂಚಾಯಿತಿ ನೂತನ ಸದಸ್ಯರು ಮತ್ತು ಮೈಸೂರು ನಗರಪಾಲಿಕೆ ಸದಸ್ಯ ಪಿ.ಪ್ರಶಾಂತ್‌ಗೌಡ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಕಾವೇರಿ ಶೇಖರ್, ಮಂಜುಳಾರಾಜ್, ಚುನಾವಣಾ ವೀಕ್ಷಕ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ವಿ.ಬಸವರಾಜು, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾನ್ಸೂನ್‌ಚಂದ್ರು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೇಗೌಡ, ಎಪಿಎಂಸಿ ಅಧ್ಯಕ್ಷ ಹೊಲದಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್.ಟಿ.ರಾಜಶೇಖರ್, ಎಚ್.ಆರ್.ಗೋಪಾಲ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್‌ಶಫಿ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್, ಜಯಣ್ಣ, ಕೃಷ್ಣೇಗೌಡ,   ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ರಾಮು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.