ADVERTISEMENT

ಮಾದಿಗ ದಂಡೋರ ಸಮಿತಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2013, 9:53 IST
Last Updated 9 ಜುಲೈ 2013, 9:53 IST

ಮೈಸೂರು:  ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾದಿಗ ದಂಡೋರ ಸಮಿತಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ಮಾಡಿದರು.

ಜಿಲ್ಲಾಧಿಕಾರಿ ಎದುರು ಜಮಾಯಿಸಿದ ಮಾದಿಗ ದಂಡೋರ ಸಮಿತಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇತರೆ ರಾಜ್ಯಗಳಲ್ಲಿ ಇರುವಂತೆ ಗ್ರಾಮ ಸಹಾಯಕರನ್ನು `ಡಿ' ದರ್ಜೆ ನೌಕರರೆಂದು ಪರಿಗಣಿಸಬೇಕು. ಗುತ್ತಿಗೆ ಪೌರ ಕಾರ್ಮಿಕ ಪದ್ಧತಿಯನ್ನು ರದ್ದುಗೊಳಿಸಿ, ಕಾಯಂಗೊಳಿಸಬೇಕು. ಅರೆಕಾಲಿಕ ಪೌರಕಾರ್ಮಿಕರಿಗೆ ವೇತನ ಹೆಚ್ಚಿಸಿ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಚರ್ಮ ಕುಶಲಕರ್ಮಿಗಳಿಗೆ ಮತ್ತು ಕೊಳೆಗೇರಿಗಳಲ್ಲಿ ವಾಸಿಸುತ್ತಿರುವವರಿಗೆ ಉಚಿತ ನಿವೇಶನಗಳನ್ನು ನೀಡಬೇಕು. ಎಲ್ಲ ಕಲಾವಿದರಿಗೆ ಮಾಸಾಶನ ನೀಡುವಂತೆ ತಮಟೆ ಕಲಾವಿದರಿಗೂ ಮಾಸಾಶನ ನೀಡಬೇಕು. ಮಾದಿನ ದಂಡೋರ ಜನಾಂಗದವರಿಗೆ ವಿಧಾನ ಪರಿಷತ್ ಸ್ಥಾನ ಮತ್ತು ನಿಗಮ ಮಂಡಳಿ ಅಧ್ಯಕ್ಷರ ಸ್ಥಾನ ನೀಡಬೇಕು. ನಗರದ ಹೃದಯ ಭಾಗದಲ್ಲಿ ಡಾ.ಬಾಬುಜಗಜೀವನರಾಂ ಅವರ ಹೆಸರಿನಲ್ಲಿ ಉದ್ಯಾನ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಸಮಿತಿ ಜಿಲ್ಲಾಧ್ಯಕ್ಷ ಎಸ್. ಸಿದ್ದರಾಜು, ಗೌರವ ಅಧ್ಯಕ್ಷ ರಾಜಣ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜು, ಕಾರ್ಮಿಕ ವಿಭಾಗದ ನಗರ ಘಟಕ ಅಧ್ಯಕ್ಷ ಶಿವಶಂಕರ್, ನಗರ ಘಟಕ ಅಧ್ಯಕ್ಷ ಕೆ. ಕೇಶವಪ್ರಸಾದ್ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.