ADVERTISEMENT

ಮಾಧ್ಯಮ ಜಾಹೀರಾತು: ಅನುಮೋದನೆ ಕಡ್ಡಾಯ

ಜಾಹೀರಾತು, ಪ್ರಚಾರ ಸಾಮಗ್ರಿಗಳ ಮೇಲೆ ನಿಗಾ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2013, 9:54 IST
Last Updated 3 ಏಪ್ರಿಲ್ 2013, 9:54 IST

ಮೈಸೂರು:ವಿದ್ಯುನ್ಮಾನ ಮಾಧ್ಯಮಗಳಲ್ಲಿ ಚುನಾ ವಣಾ ಜಾಹೀರಾತು ಪ್ರಸಾರ ಮಾಡುವ ಮುನ್ನ ಕಡ್ಡಾಯವಾಗಿ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯಿಂದ ಅನುಮೋದನೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಶಿಖಾ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳ ವಾರ ನಡೆದ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಮಾಧ್ಯಮ ಗಳಲ್ಲಿ ಪ್ರಕಟವಾಗುವ ಜಾಹೀರಾತುಗಳು ಸುದ್ದಿ ರೂಪದ ಜಾಹೀರಾತುಗಳು ಚುನಾವಣಾ ಪ್ರಚಾರ ಸಾಮಗ್ರಿಗಳ ಬಗ್ಗೆ ನಿಗಾವಹಿಸಿ ಆಯಾ ಕ್ಷೇತ್ರದ ಚುನಾವಣಾಧಿಕಾರಿ ಗಳಿಗೆ ಹಾಗೂ ವೆಚ್ಚ ವೀಕ್ಷಕರಿಗೆ ದಿನವಹಿ ವರದಿಯನ್ನು ಸಮಿತಿ ನೀಡಲಿದೆ ಎಂದರು.

ದೂರದರ್ಶನ, ರೇಡಿಯೋ, ಕೇಬಲ್ ಟೆಲಿವಿಷನ್ ಮುಂತಾದ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ಪ್ರಸಾರಕ್ಕೆ ಮುನ್ನ ಜಿಲ್ಲಾ ಸಮಿತಿಯಿಂದ ಕಡ್ಡಾಯ ಅನುಮೋದನೆ ಪಡೆದುಕೊಳ್ಳಬೇಕು. ಸಮಿತಿ ವಾರ್ತಾ ಭವನದಲ್ಲಿ ಕಾರ್ಯನಿರ್ವಹಿಸಲಿದ್ದು ನಿಗದಿತ ನಮೂನೆಗಳನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳಿಗೆ ಅನುಮೋದನೆ ಅಗತ್ಯವಿರುವುದಿಲ್ಲ. ಆದರೆ ಪ್ರಕಟವಾಗುವ ಎಲ್ಲ ಜಾಹೀರಾತುಗಳನ್ನು ಸಮಿತಿಯು ಗಮನಿಸಿ ಅಭ್ಯರ್ಥಿಗಳ ವೆಚ್ಚದ ಲೆಕ್ಕಕ್ಕೆ ತೋರಿಸಲು ವೆಚ್ಚ ವೀಕ್ಷಕರಿಗೆ ಹಾಗೂ ಚುನಾವಣಾ ಅಧಿಕಾರಿಗಳಿಗೆ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡುತ್ತದೆ. ಕರಪತ್ರ, ಭಿತ್ತಿಪತ್ರ ಹಾಗೂ ಈ ರೀತಿಯ ಇತರೆ ಚುನಾವಣಾ ಸಾಮಗ್ರಿಗಳಲ್ಲಿ ಪ್ರಕಾಶಕರ ಹಾಗೂ ಮುದ್ರಕರ ಹೆಸರು, ವಿಳಾಸ ಮುದ್ರಿಸುವುದು ಕಡ್ಡಾಯವಾಗಿದೆ. ಮುದ್ರಕರು ಹಾಗೂ ಪ್ರಕಾಶಕರು ಈ ಕುರಿತ  ಘೋಷಣಾ ಪತ್ರವೊಂದನ್ನು ಚುನಾವಣಾ ಅಧಿಕಾರಿಗಳಿಗೆ  ಸಲ್ಲಿಸಬೇಕಾಗಿರುತ್ತದೆ. ಯಾವುದೇ ಚುನಾವಣಾ ಸಾಮಗ್ರಿಗಳ ಮೇಲೆ ಮುದ್ರಕರ ಹಾಗೂ ಪ್ರಕಾಶಕರ ವಿವರ ಇಲ್ಲದಿದ್ದಲ್ಲಿ ಅಂತಹ ವಿವರಗಳನ್ನು ಚುನಾವಣಾ ಅಧಿಕಾರಿಗಳಿಗೆ ಸಮಿತಿ ಕಳುಹಿಸಿ ಕೊಡುತ್ತದೆ ಎಂದರು.

ಅಭ್ಯರ್ಥಿಯ ಗಮನಕ್ಕೆ ತಾರದೆ ಬೇರೆಯವರು ಅಭ್ಯರ್ಥಿಯ ಹೆಸರಿನಲ್ಲಿ ಜಾಹೀರಾತು ಹಾಗೂ ಚುನಾವಣಾ ಸಾಮಗ್ರಿ ಮುದ್ರಿಸುವಂತಿಲ್ಲ. ಇಂತಹದು ಕಂಡುಬಂದಲ್ಲಿ ಈ ರೀತಿ ಪ್ರಕಟಿಸಿದವರ ವಿರುದ್ಧವೂ ಕ್ರಮ ವಹಿಸಲಾಗುತ್ತದೆ. ಪತ್ರಿಕೆಗಳಲ್ಲಿ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿ ರೂಪದ ಜಾಹೀರಾತುಗಳ ಬಗ್ಗೆಯೂ ಸಮಿತಿ ಗಮನಹರಿಸಲಿದೆ. ಕಾಸಿಗಾಗಿ ಸುದ್ದಿ ಎಂದು ಪರಿಗಣಿಸಲಾಗುವ ಈ ಪ್ರಕರಣಗಳನ್ನು ವಾರ್ತಾ ಇಲಾಖೆ ಜಾಹೀರಾತು ದರ ಅನ್ವಯಿಸಿ ಅಭ್ಯರ್ಥಿಗಳ ಲೆಕ್ಕಕ್ಕೆ ಸೇರಿಸಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ವಾರ್ತಾಧಿಕಾರಿ ಎ.ಆರ್.ಪ್ರಕಾಶ್, ಕ್ಷೇತ್ರ ಪ್ರಚಾರಾಧಿಕಾರಿ ಎನ್.ಡಿ.ಪ್ರಸಾದ್, ಸಮಿತಿ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.